ADVERTISEMENT

ಮತಎಣಿಕೆ ಕೇಂದ್ರಕ್ಕೆ ಬಿಗಿಭದ್ರತೆ

ಮಹಾರಾಣಿ ಕಾಲೇಜಿನ ಭದ್ರತಾ ಕೊಠಡಿ ಸೇರಿದ ಮತಯಂತ್ರಗಳು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2019, 19:24 IST
Last Updated 19 ಏಪ್ರಿಲ್ 2019, 19:24 IST
ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್‌ಗಳನ್ನು ಮಹಾರಾಣಿ ಕಾಲೇಜಿನ ಭದ್ರತಾ ಕೊಠಡಿಗೆ ಸಾಗಿಸಲಾಯಿತು
ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್‌ಗಳನ್ನು ಮಹಾರಾಣಿ ಕಾಲೇಜಿನ ಭದ್ರತಾ ಕೊಠಡಿಗೆ ಸಾಗಿಸಲಾಯಿತು   

ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಮತಎಣಿಕೆ ನಡೆಯಲಿರುವ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

2,187 ಮತಗಟ್ಟೆಗಳಲ್ಲಿ ಗುರುವಾರ ಮತದಾನ ಪೂರ್ಣಗೊಂಡ ಬಳಿಕ ಎಲ್ಲ ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್‌ಗಳನ್ನು ತಂದು ಮಹಾರಾಣಿ ಕಾಲೇಜಿನ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ.

ಮತಯಂತ್ರಗಳನ್ನು ಇರಿಸಿರುವ ಭದ್ರತಾ ಕೊಠಡಿಗೆ ಮೂರು ಹಂತದ ಭದ್ರತೆ ಒದಗಿಸಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌), ರಾಜ್ಯ ಮೀಸಲು ಪೊಲೀಸ್‌ ಪಡೆಯ (ಕೆಎಸ್‌ಆರ್‌‍ಪಿ) ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರನ್ನು ನಿಯೋಜಿಸಲಾಗಿದೆ. ಮತ ಎಣಿಕೆ ನಡೆಯಲಿರುವ ಮೇ 23ರ ವರೆಗೂ ಭದ್ರತೆ ಮುಂದುವರಿಯಲಿದೆ.

ADVERTISEMENT

ಮತದಾನ ಕೊನೆಗೊಂಡ ಕೂಡಲೇ ಮತಗಟ್ಟೆ ಸಿಬ್ಬಂದಿ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ಮೊಹರು ಮಾಡಿ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಿದ್ದ ಡಿಮಸ್ಟರಿಂಗ್‌ ಕೇಂದ್ರಗಳಿಗೆ ಸಾಗಿಸಿದರು. ಡಿಮಸ್ಟರಿಂಗ್‌ ಪ್ರಕ್ರಿಯೆ ಬಳಿಕ ಮಹಾರಾಣಿ ಕಾಲೇಜಿನ ಭದ್ರತಾ ಕೊಠಡಿಗೆ ತಂದು ಇರಿಸಲಾಯಿತು.

ಗುರುವಾರ ರಾತ್ರಿ ಕೊಡಗು ಹಾಗೂ ಮೈಸೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು. ಇದರಿಂದ ಮತಯಂತ್ರಗಳನ್ನು ಡಿಮಸ್ಟರಿಂಗ್‌ ಕೇಂದ್ರಗಳಿಗೆ ಸಾಗಿಸುವುದು ತಡವಾಯಿತು. ಕೆಲವೆಡೆ ಡಿಮಸ್ಟರಿಂಗ್‌ ಪ್ರಕ್ರಿಯೆ ಕೊನೆಗೊಳ್ಳುವಾಗ ತಡರಾತ್ರಿಯಾಗಿತ್ತು. ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತಯಂತ್ರಗಳನ್ನು ಶುಕ್ರವಾರ ಬೆಳಿಗ್ಗೆ ನಗರಕ್ಕೆ ತರಲಾಯಿತು.

ವಿವಿಧ ಕಡೆಗಳಿಂದ ಲಾರಿಗಳಲ್ಲಿ ತಂದ ಮತಯಂತ್ರಗಳನ್ನು ಭದ್ರತಾ ಕೊಠಡಿಗಳ ಒಳಕ್ಕೆ ಕೊಂಡೊಯ್ಯುವ ಪ್ರಕ್ರಿಯೆಯನ್ನು ವಿಡಿಯೊ ಚಿತ್ರೀಕರಣ ಮಾಡಲಾಯಿತು. ಅಭ್ಯರ್ಥಿಗಳ ಏಜೆಂಟರು ಈ ವೇಳೆ ಹಾಜರಿದ್ದರು. ಎಲ್ಲ ಮತಯಂತ್ರಗಳನ್ನು ಭದ್ರತಾ ಕೊಠಡಿಗಳಲ್ಲಿರಿಸಿದ ಬಳಿಕ ಬಾಗಿಲಿಗೆ ಬೀಗ ಹಾಕಿ ಮೊಹರು ಮಾಡಲಾಯಿತು.

ಮತಯಂತ್ರಗಳನ್ನು ಇರಿಸಿರುವ ಪ್ರದೇಶಕ್ಕೆ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ಆಯೋಗದ ಅನುಮತಿ ಹೊಂದಿರುವ ಅಧಿಕಾರಿಗಳ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಮತ ಎಣಿಕೆ ಕೇಂದ್ರದ ಒಳಗೆ ಹಾಗೂ ಸುತ್ತಲೂ 30ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಮತ್ತು ನಗರ ಪೊಲೀಸ್‌ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರು ಶುಕ್ರವಾರ ಬೆಳಿಗ್ಗೆ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.