ಜಯಪುರ: ಹೋಬಳಿಯ ಉದ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರವು (ಆಯುಷ್ಮಾನ್ ಆರೋಗ್ಯ ಕೇಂದ್ರ) ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನಡೆಸಿದ ರಾಷ್ಟ್ರೀಯ ಗುಣಮಟ್ಟ ಭರವಸೆ ಮಾನದಂಡ (ಎನ್ಕ್ಯುಎಎಸ್) ಮೌಲ್ಯಮಾಪನದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ರಾಷ್ಟ್ರೀಯ ಮಾನ್ಯತೆ ಪಡೆದಿದೆ.
ಆರೋಗ್ಯ ಇಲಾಖೆ 2020-2030ರ ದಶಕವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸೇವೆಗಳ ದಶಕವೆಂದು ಘೋಷಿಸಿದೆ. ರೋಗಪೀಡಿತ ಆರೋಗ್ಯ ಸುಧಾರಣೆಗಾಗಿ ಆರೋಗ್ಯಕರ ಜೀವನ ಶೈಲಿಯನ್ನು ಉತ್ತೇಜಿಸುವುದು ಆರೋಗ್ಯ ಇಲಾಖೆಯ ಮೂಲ ತತ್ವವಾಗಿದೆ.
ಈ ಆರೋಗ್ಯ ಸಂಸ್ಥೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯೊಂದಿಗೆ, ರೋಗಗಳನ್ನು ಗುಣಪಡಿಸಲು ಸಾಧ್ಯವಾಗಬೇಕು. 15,000 ಜನಸಂಖ್ಯೆ ಹೊಂದಿರುವ ಉದ್ಬೂರಿನ ಆಯುಷ್ಮಾನ್ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ ರಾಷ್ಟ್ರೀಯ ಗುಣಮಟ್ಟ ಭರವಸೆ ಮಾನದಂಡದಡಿ ಉತ್ತಮ ಸೇವೆ ನೀಡುತ್ತಿದ್ದಾರೆ. ಹೀಗಾಗಿ, 2024-25 ನೇ ಸಾಲಿನ ಅತ್ಯುತ್ತಮ ಆಯುಷ್ಮಾನ್ ಆರೋಗ್ಯ ಕೇಂದ್ರ ಎಂಬ ಹೆಗ್ಗಳಿಕೆಗೆ ಭಾಜನವಾಗಿದೆ.ವೈದ್ಯಾಧಿಕಾರಿಗಳು, ಸಿಬ್ಬಂದಿ , ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರ ನಿರಂತರ ಶ್ರಮ ಈ ಫಲಿತಾಂಶ ನೀಡಿದೆ.
ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ, ರಾಷ್ಟ್ರೀಯ ಗುಣಮಟ್ಟ ಭರವಸೆಯ ಜಿಲ್ಲಾ ಸಲಹಗಾರ ಡಾ. ಗೋಪಿನಾಥ್ , ತಾಲೂಕಿನ ಆರೋಗ್ಯ ಅಧಿಕಾರಿ ಡಾ.ಪುಟ್ಟತಾಯಮ್ಮ ಇವರು ಉದ್ಬೂರು ಆಯುಷ್ಮಾನ್ ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ.ಆರ್ ಉಷಾ ಮತ್ತು ತಂಡವನ್ನು ಅಭಿನಂದಿಸಿದರು.
ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲು ಉತ್ತೇಜನ ನೀಡಿದೆ.ಡಾ.ಆರ್ ಉಷಾ. ವೈದ್ಯಾಧಿಕಾರಿ ಉದ್ಬೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.