ಮೈಸೂರು: ‘ಕೇಂದ್ರ ಬಿಜೆಪಿ ಸರ್ಕಾರವು ಈ ಸಾಲಿನ ಬಜೆಟ್ನಲ್ಲೂ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿದೆ. ರಾಜ್ಯಕ್ಕೆ ಅನ್ಯಾಯ ಮಾಡುವುದನ್ನು ಮುಂದುವರಿಸಿದ್ದು, ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೂರಿದರು.
ಖಾಲಿ ಚೊಂಬು ಹಾಗೂ ಮೂರುನಾಮ ಬಳಿದ ತೆಂಗಿನಕಾಯಿ ಚಿಪ್ಪುಗಳನ್ನು ಮುಂದಿಟ್ಟುಕೊಂಡು ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ಬಾಣ ಪ್ರಯೋಗಿಸಿದರು.
‘ಕೇಂದ್ರದಲ್ಲಿ ಸಚಿವರಾಗಿರುವ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕಕ್ಕೆ ಒಂದೇ ಒಂದು ಯೋಜನೆಯನ್ನೂ ತರಲು ಸಾಧ್ಯವಾಗಿಲ್ಲ. ಇವರು ದಿನ ಬೆಳಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸುತ್ತಾ ಕಾಲಹರಣ ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿಲ್ಲ’ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರವು ರೈತರು, ಯುವಕರು, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಅಲ್ಲದೇ, ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದ್ದರು. ಆದರೆ, ಅದಕ್ಕೆ ಸ್ಪಂದನೆ ದೊರೆತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಇದ್ದಾಗ ಬಜೆಟ್ ಗಾತ್ರ ₹14 ಲಕ್ಷ ಕೋಟಿ ಇತ್ತು. ಈ ಬಾರಿಯ ಬಜೆಟ್ ಗಾತ್ರ ₹50 ಕೋಟಿ ದಾಟಿದೆ. ₹16 ಕೋಟಿ ಸಾಲ ತೆಗೆದುಕೊಂಡಿದ್ದಾರೆ. 1947ರಿಂದ 2014ರವರೆಗೆ ನಮ್ಮ ದೇಶ ಮಾಡಿದ್ದ ಸಾಲ ₹53 ಲಕ್ಷ ಕೋಟಿ ಇತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಂದರೆ 10 ವರ್ಷಗಳಲ್ಲಿ ₹205 ಲಕ್ಷ ಕೋಟಿಯಾಗಿದೆ. ದೇಶವನ್ನು ಅಭಿವೃದ್ಧಿಪಥದತ್ತ ನಡೆಸುವ ಬದಲಿಗೆ ಸಾಲದ ಕೂಪಕ್ಕೆ ತಳ್ಳಿರುವಂತಹ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ’ ಎಂದು ಟೀಕಿಸಿದರು.
‘ನರೇಗಾ ಅನುದಾನವನ್ನೂ ಕಡಿಮೆ ಮಾಡಿದ್ದಾರೆ. ಕೃಷಿ ಕ್ಷೇತ್ರಕ್ಕೆ ಅನುದಾನ ಹಂಚಿಕೆಯಲ್ಲೂ ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿದೆ’ ಎಂದರು.
ಪಕ್ಷದ ನಗರ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಮುಖಂಡರಾದ ಎಚ್.ವಿ.ರಾಜೀವ್, ಅಧ್ಯಕ್ಷ ಬಿ.ಎಂ.ರಾಮು, ಬಸವಣ್ಣ ಹಾಗೂ ವಕ್ತಾರ ಕೆ.ಮಹೇಶ್ ಇದ್ದರು.
ರಾಜ್ಯದ ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಇನ್ನಾದರೂ ಯೋಚಿಸಬೇಕುಎಂ. ಲಕ್ಷ್ಮಣ ವಕ್ತಾರ ಕೆಪಿಸಿಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.