ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪುರುಷರ ವಿದ್ಯಾರ್ಥಿನಿಲಯದ ಅವ್ಯವಸ್ಥೆಯ ಬಗ್ಗೆ ‘ಪ್ರಜಾವಾಣಿ’ ಬೆಳಕುಚೆಲ್ಲಿದ್ದ ವರದಿಯನ್ನು ಆಧರಿಸಿ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಲು ವಿ.ವಿ. ಮಹತ್ವದ ತೀರ್ಮಾನ ಕೈಗೊಂಡಿದೆ.
ಈ ಕುರಿತು ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ ಅವರು ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದು, ವಿದ್ಯಾರ್ಥಿಗಳ ಕ್ಷೇಮಪಾಲನೆಗೆ ದುರಸ್ತಿ ಹಾಗೂ ಮೇಲ್ದರ್ಜೆ ಕಾರ್ಯ ಅತ್ಯಗತ್ಯ ಎಂದು ತೀರ್ಮಾನಿಸಿದ್ದಾರೆ.
‘ಪುರುಷರ ವಿದ್ಯಾರ್ಥಿನಿಲಯದ ಸಮಸ್ಯೆಗಳ ಬಗ್ಗೆ ಮಾಹಿತಿ ಬಂದಿದೆ. ಜತೆಗೆ, ವಿ.ವಿ.ಯ ಎಲ್ಲ ಹಾಸ್ಟೆಲ್ಗಳ ಕಟ್ಟಡಗಳ ಪರಿಶೀಲನೆ ನಡೆಸಿ, ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಈ ಸಂಬಂಧ ವಿಶ್ವವಿದ್ಯಾಲಯದ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದ್ದು, ಎಂಜಿನಿಯರ್ಗಳಿಗೆ ಸೂಚನೆ ನೀಡಲಾಗಿದೆ. ಹೊಸ ವಿದ್ಯಾರ್ಥಿಗಳು, ಪ್ರವೇಶಾತಿ ಪಡೆಯುವುದರ ಒಳಗಾಗಿ ವಿದ್ಯಾರ್ಥಿನಿಲಯಗಳನ್ನು ದುರಸ್ತಿ ಮಾಡಲಾಗುವುದು’ ಎಂದು ಪ್ರೊ.ಗಾಂಧಿ ‘ಪ್ರಜಾವಾಣಿ’ಗೆ ತಿಳಿಸಿದರು.
ವಿದ್ಯಾರ್ಥಿಗಳ ತೆರವು: ವಿಶ್ವವಿದ್ಯಾಲಯದ ನಿಯಮಾವಳಿಗಳ ಪ್ರಕಾರ ಪ್ರತಿ ವರ್ಷದಂತೆ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಖಾಲಿ ಮಾಡಲು ತಿಳಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ವಹಿಸಿಲಾಗುವುದು ಎಂದರು.
ವಿಶ್ವವಿದ್ಯಾನಿಲಯಕ್ಕೆ ಸರ್ಕಾರ ನೀಡಿರುವ ಅನುದಾನದಲ್ಲಿ ವಿದ್ಯಾರ್ಥಿನಿಲಯಕ್ಕೆ ಅಗ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು. ಜತೆಗೆ, ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕಟ್ಟಡ ನಿರ್ಮಾಣ ಮಾಡುವ ಯೋಜನೆಯನ್ನು ರೂಪಿಸಲಾಗಿದೆ. ವರ್ಷದೊಳಗೆ ಕಾಮಗಾರಿ ಪ್ರಾರಂಭ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.