ADVERTISEMENT

‘ಅಮೆರಿಕದ ಸಾಮ್ರಾಜ್ಯಶಾಹಿ ನಡೆ ಖಂಡನೀಯ’

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 4:42 IST
Last Updated 7 ಜನವರಿ 2026, 4:42 IST
ಮೈಸೂರಿನ ಪುರಭವನದ ಆವರಣದಲ್ಲಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ಸದಸ್ಯರು ಅಮೆರಿಕದ ಸಾಮ್ರಾಜ್ಯಶಾಹಿ ನಡೆ ಖಂಡಿಸಿ ಪ್ರತಿಭಟನೆ ನಡೆಸಿದರು ಪ್ರಜಾವಾಣಿ ಚಿತ್ರ
ಮೈಸೂರಿನ ಪುರಭವನದ ಆವರಣದಲ್ಲಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ಸದಸ್ಯರು ಅಮೆರಿಕದ ಸಾಮ್ರಾಜ್ಯಶಾಹಿ ನಡೆ ಖಂಡಿಸಿ ಪ್ರತಿಭಟನೆ ನಡೆಸಿದರು ಪ್ರಜಾವಾಣಿ ಚಿತ್ರ   

ಮೈಸೂರು: ವೆನೆಜುವೆಲಾದ ಮೇಲೆ ಮಿಲಿಟರಿ ದಾಳಿ ನಡೆಸಿ ಅಲ್ಲಿನ ಅಧ್ಯಕ್ಷರನ್ನು ಅಪಹರಿಸಿದ ಅಮೆರಿಕದ ಸಾಮ್ರಾಜ್ಯಶಾಹಿ ನಡೆ ಖಂಡಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ಸದಸ್ಯರು ಮಂಗಳವಾರ ಪುರಭವನ ಆವರಣದಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಎದುರು ಪ್ರತಿಭಟನೆ ನಡೆಸಿದರು. 

‘ವೆನೆಜುವೆಲಾದ ಅಧ್ಯಕ್ಷ ನಿಕೊಲಸ್ ಮಡೂರೊ ಮಾದಕ ದ್ರವ್ಯಗಳ ಕಳ್ಳಸಾಗಣೆ ಮಾಡಿಸುತ್ತಿದ್ದಾರೆ ಎಂದು ಅಮೆರಿಕ ಆರೋಪಿಸಿರುವುದು ಹಾಸ್ಯಾಸ್ಪದ. ಅಮೆರಿಕವು ಈ ಹಿಂದೆ, ಇರಾಕ್‌ನಲ್ಲಿ ಸಮೂಹ ವಿನಾಶದ ಅಸ್ತ್ರಗಳಿವೆ ಎಂದು ಆರೋಪಿಸಿ, ಯುದ್ಧ ಮಾಡಿ ಅಲ್ಲಿನ ಅಧ್ಯಕ್ಷ ಸದ್ದಾಂ ಹುಸೇನ್ ಅವರನ್ನು ಹಿಡಿದು ಕೊಲೆ ಮಾಡಿತು. ಆದರೆ ಇದುವರೆಗೂ ಅಲ್ಲಿ ಶಸ್ತ್ರಾಸ್ತ್ರ ಪತ್ತೆ ಮಾಡಲು ಸಾಧ್ಯವಾಗಲಿಲ್ಲ. ಅಫ್ಘಾನಿಸ್ತಾನದಲ್ಲಿ ಭಯೋತ್ಪಾದನೆಯ ವಿರುದ್ಧ ಯುದ್ಧ ಸಾರಿ ಈಗ ತಾಲಿಬಾನ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಿರಿಯಾದ ಚುನಾಯಿತ ಸರ್ಕಾರ ಬೀಳಿಸಿ ಐಸಿಸ್ ಕೈಗೆ ಕೊಡಲಾಗಿದೆ’ ಎಂದು ಟೀಕಿಸಿದರು.

‘ಅಮೆರಿಕದ ಆಕ್ರಮಣದ ವಿರುದ್ಧ ಜಗತ್ತಿನ ಶಾಂತಿಪ್ರಿಯ ಜನತೆ ತೀವ್ರವಾಗಿ ಹೋರಾಡಲು ಮುಂದಾಗಬೇಕು. ವೆನೆಜುವೆಲಾದ ಅಧ್ಯಕ್ಷರನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಭಾರತ ಸರ್ಕಾರವು ಹಿಂದಿನಂತೆ ತನ್ನ ಸಾಮ್ರಾಜ್ಯಶಾಹಿ ವಿರೋಧಿ ಶಾಂತಿಪರ ನೀತಿಯನ್ನು ಪಾಲಿಸಿ ಅಮೆರಿಕದ ವಿರುದ್ಧ ಜಾಗತಿಕ ಅಭಿಪ್ರಾಯ ಮೂಡಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಎಸ್‌ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ಬಿ.ರವಿ, ಸದಸ್ಯರಾದ ಎಂ.ಉಮಾದೇವಿ, ಯಶೋಧರ್, ಸಂಧ್ಯಾ. ಪಿ.ಎಸ್, ಹರೀಶ್, ಸುಮಾ, ಮುದ್ದುಕೃಷ್ಣ, ಆಸಿಯಾ ಬೇಗಂ, ನೀತುಶ್ರೀ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.