ಬೆಟ್ಟದಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಸೇವೆ ಸಲ್ಲಿಸುತ್ತಿದೆ ಎಂದು ನಿವೃತ್ತ ಪ್ರಾಂಶುಪಾಲ ಗೊರಳ್ಳಿ ಮಂಜುನಾಥ್ ಹೇಳಿದರು.
ಚಪ್ಪರದಹಳ್ಳಿ ಗ್ರಾಮದಲ್ಲಿ ಶುಕ್ರವಾರ ಧರ್ಮಸ್ಥಳ ಸಂಸ್ಥೆ ಆಯೋಜಿಸಿದ್ದ ಸಾಮೂಹಿಕ ಶ್ರೀ ವರ ಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಮಹಿಳಾ ಸಬಲೀಕರಣ, ಗ್ರಾಮೀಣ ಅಭಿವೃದ್ಧಿಗೆ ಯೋಜನೆಗಳನ್ನು ನೀಡಿ ಸಮಾಜ ಸೇವೆ ಮಾಡುತ್ತಿದ್ದಾರೆ ಎಂದರು.
ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿ,‘ದೇವರ ಆರಾಧನೆಯೊಂದಿಗೆ ನಾವು ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಗ್ರಾಮಾಭಿವೃದ್ಧಿ ಸಂಸ್ಥೆ ರಾಜ್ಯದ ಸುಮಾರು ಎಪ್ಪತೈದು ಸಾವಿರ ಶಾಲೆಗಳಿಗೆ ಪೀಠೋಪಕರಣ, ಹೈನುಗಾರಿಕೆಯನ್ನು ಉತ್ತೇಜಿಸಲು 5 ಸಾವಿರ ಹಾಲಿನ ಉತ್ಪಾದಕರ ಸಹಕಾರ ಸಂಘಗಳಿಗೆ ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ಹಸ್ತಾಂತರ ಮಾಡಲಾಗಿದೆ. ಸಾವಿರಕ್ಕೂ ಹೆಚ್ಚು ಕೆರೆಗಳ ಅಭಿವೃದ್ಧಿ , ಸ್ವಸಹಾಯ ಸಂಘದ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ , ಆರೋಗ್ಯ ರಕ್ಷಣೆಗೆ ವಿಶೇಷ ವಿಮಾ ಯೋಜನೆಗಳನ್ನು ನೀಡಿದೆ ಎಂದರು.
ಗ್ರಾಮದ ಕುರ್ಜು ಬೀದಿಯಲ್ಲಿ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ವರಮಹಾಲಕ್ಷ್ಮಿ ದೇವಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಮಂಜುನಾಥ ಸ್ವಾಮಿ ಭಾವಚಿತ್ರವನ್ನು ಇರಿಸಿ ಪೂಜೆ ಸಲ್ಲಿಸಲಾಯಿತು. ವಿದ್ಯಾರ್ಥಿ ವೇತನ, ವಾತ್ಸಲ್ಯ ಮನೆ ಸೇರಿದಂತೆ ವಿವಿಧ ಯೋಜನೆಗಳ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು. ಭಕ್ತರಿಗೆ ಪ್ರಸಾದ ನೀಡಲಾಯಿತು.
ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಸ್ವಾಮಿ, ಉಪಾಧ್ಯಕ್ಷೆ ಸುನೀತಾ ಮಂಜು, ಗ್ರಾಮದ ಮುಖಂಡರಾದ ಸಿ.ಎನ್ ಕಾಳೇಗೌಡ, ಸಿ.ಎನ್ ಬಸವರಾಜು, ಪಟೇಲ್ ಕಾಳೇಗೌಡ, ಪೂಜಾ ಸಮಿತಿ ಅಧ್ಯಕ್ಷ ಸಿ.ಎ ನಂದೀಶ್, ಉಪಾಧ್ಯಕ್ಷ ದಿನೇಶ್, ಕಾರ್ಯದರ್ಶಿ ಕೀರ್ತಿ, ಸಹಕಾರ್ಯದರ್ಶಿ ಜಿ.ಎಸ್ ಮಹದೇವ್, ಕೋಶಧಿಕಾರಿ ಸಿ.ಕೆ ಆಶಾ, ಜನಜಾಗೃತಿ ವೇದಿಕೆ ಸದಸ್ಯ ಎ.ಎಸ್ ಚಂದ್ರಶೇಖರ್, ರಾಮಚಂದ್ರ, ಗ್ರಾ.ಪಂ ಕ್ಲರ್ಕ್ ಮಹೇಂದ್ರ, ಯೋಜನಾಧಿಕಾರಿ ಸಂತೋಷ್ ಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.