ಹುಣಸೂರು: ರಸ್ತೆಗೆ ಡಾಂಬರೀಕರಣ ಹಾಕುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ತಾಲ್ಲೂಕಿನ ಕಾಡಂಚಿನ ಗ್ರಾಮ ಬಿಲ್ಲೇನಹೊಸಹಳ್ಳಿಯ ಗ್ರಾಮಸ್ಥರು ಮತದಾನವನ್ನು ಬಹಿಷ್ಕರಿಸಿದ್ದರು. ಸಹಾಯಕ ಚುನಾವಣಾಧಿಕಾರಿ ಚಂದ್ರಶೇಖರಯ್ಯ ಮತದಾರರನ್ನು ಮನವೊಲಿಸಿದ ಬಳಿಕ, ಮಧ್ಯಾಹ್ನ 3.40ಕ್ಕೆ ಮತದಾನ ಮಾಡಿದರು.
ಬಿಲ್ಲೇನಹೊಸಹಳ್ಳಿಯ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಡಾಂಬರು ಹಾಕಬೇಕು. ಗ್ರಾಮದಲ್ಲಿ ಶಾಲಾ ಕಟ್ಟಡ ನಿರ್ಮಿಸಲು ಹಳೆಯ ಕಟ್ಟಡವನ್ನು ತೆರವುಗೊಳಿಸಲಾಗಿದೆ. ಆದರೆ, ಈವರೆಗೂ ಕಟ್ಟಡ ಕಾಮಗಾರಿ ಆರಂಭಿಸಿಲ್ಲ. ಇದರಿಂದ ಶಾಲಾ ಮಕ್ಕಳಿಗೆ ತೊಂದರೆ ಉಂಟಾಗಿದೆ. ಆನೆ ಹಾವಳಿಯನ್ನು ತಡೆಗಟ್ಟಲು ಕೈಗೊಂಡಿರುವ ತಡೆಗೋಡೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ, ಆನೆಗಳು ಗ್ರಾಮಕ್ಕೆ ನುಗ್ಗುತ್ತಿವೆ. ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಬೇಡಿಕೆಗಳ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಹೀಗಾಗಿ, ಮತದಾನದಿಂದ ದೂರ ಉಳಿಯುವುದಾಗಿ ಘೋಷಿಸಿದ್ದರು.
ಮತದಾನ ಬಹಿಷ್ಕರಿಸಿರುವ ಬಗ್ಗೆ ಮಾಹಿತಿ ಪಡೆದ ಸಹಾಯಕ ಚುನಾವಣಾಧಿಕಾರಿ ಚಂದ್ರಶೇಖರಯ್ಯ ಮಧ್ಯಾಹ್ನ 3.15ಕ್ಕೆ ಗ್ರಾಮಕ್ಕೆ ಬಂದರು. ‘ಶಾಸಕರ ಗಮನಕ್ಕೆ ತಂದು, ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು’ ಎಂದು ಮತದಾರರ ಮನವೊಲಿಸಿದರು. ಬಳಿಕ, ಮಧ್ಯಾಹ್ನ 3.40ಕ್ಕೆ ಮತದಾನ ಮಾಡಲು ಮುಂದಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.