ADVERTISEMENT

ಸಂವಿಧಾನ ವಿರೋಧಿಗಳ ಸೋಲಿಸಿ: ಚಿಂತಕ ಪ್ರೊ.ಕೆ.ಎಸ್.ಭಗವಾನ್‌

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 12:46 IST
Last Updated 26 ಜನವರಿ 2023, 12:46 IST
ಮೈಸೂರಿನ ಅಶೋಕಪುರಂ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನದಲ್ಲಿ ಗುರುವಾರ ಸಂವಿಧಾನೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಸಂವಿಧಾನದ ಪ್ರತಿಗೆ ನಮನ ಸಲ್ಲಿಸಲಾಯಿತು
ಮೈಸೂರಿನ ಅಶೋಕಪುರಂ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನದಲ್ಲಿ ಗುರುವಾರ ಸಂವಿಧಾನೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಸಂವಿಧಾನದ ಪ್ರತಿಗೆ ನಮನ ಸಲ್ಲಿಸಲಾಯಿತು   

ಮೈಸೂರು: ‘ಸಂವಿಧಾನ ವಿರೋಧಿಗಳನ್ನು ಮುಂಬರುವ ಚುನಾವಣೆಗಳಲ್ಲಿ ಸೋಲಿಸಬೇಕು. ಆ ಮೂಲಕ ಸಂವಿಧಾನವನ್ನು ರಕ್ಷಿಸಬೇಕು’ ಚಿಂತಕ ಪ್ರೊ.ಕೆ.ಎಸ್.ಭಗವಾನ್‌ ಹೇಳಿದರು.

ಅಶೋಕಪುರಂ ಅಭಿಮಾನಿಗಳ ಬಳಗವು ಅಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ಗುರುವಾರ ಏರ್ಪಡಿಸಿದ್ದ ‘ಸಂವಿಧಾನೋತ್ಸವ’ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ಸಂವಿಧಾನ ಇಲ್ಲದಿದ್ದರೆ ತುಂಬಾ ಕಷ್ಟವಾಗುತ್ತಿತ್ತು’ ಎಂದರು.

‘ದೇಶದಲ್ಲಿ ತುಂಬಿ ತುಳುಕುತ್ತಿದ್ದ ಅಸಮಾನತೆ ಹೋಗಲಾಡಿಸಲು ಅಂಬೇಡ್ಕರ್ ಸಂವಿಧಾನ ರಚಿಸುವ ಮೂಲಕ ಅದ್ಭುತ ಕೆಲಸ ಮಾಡಿದರು. ಪ್ರತಿಯೊಬ್ಬರೂ ಅವರ ಬಗ್ಗೆ ಅರಿತುಕೊಳ್ಳಬೇಕು. ಧರ್ಮ–ಅಧರ್ಮದ ವ್ಯತ್ಯಾಸ ತಿಳಿಯಬೇಕು’ ಎಂದು ತಿಳಿಸಿದರು.

ADVERTISEMENT

ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸ್ ಮಾತನಾಡಿ, ‘ಜನರು ಎಚ್ಚೆತ್ತುಕೊಳ್ಳದಿದ್ದರೆ ಹೊಸ ಸಂವಿಧಾನ ರಚಿಸಿ, ಅಂಬೇಡ್ಕರ್ ಅವರ ಹೆಸರನ್ನು ಅಳಿಸಿ ಹಾಕುತ್ತಾರೆ. ವಿನೀತರಾಗಿ ಕೈಮುಗಿಯುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಆ ರೀತಿ ಮಾಡಿಯೇ ಗಾಂಧಿ, ಇಂದಿರಾಗಾಂಧಿ, ರಾಜೀವ್ ಗಾಂಧಿಯನ್ನು ಹತ್ಯೆ ಮಾಡಲಾಯಿತು ಎಂಬುದನ್ನು ಅರ್ಥ ಮಾಡಿಕೊಂಡು ಮತ ಚಲಾಯಿಸಬೇಕು’ ಎಂದು ಹೇಳಿದರು.

ಮುಖಂಡ ಪುರುಷೋತ್ತಮ್, ನಗರಪಾಲಿಕೆ ಸದಸ್ಯೆ ಪಲ್ಲವಿ ಬೇಗಂ, ಅಂಕಣಕಾರ ಬನ್ನೂರು ರಾಜು, ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿದರು.

ಮುಖಂಡ ಪದ್ಮರಾಜಣ್ಣ, ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಸಂವಿಧಾನದ ಪೀಠಿಕೆ ಬೋಧಿಸಿದರು. ಬಳಗದ ಸಿದ್ದಸ್ವಾಮಿ, ಶಿಕ್ಷಕ ರಮೇಶ್, ಶ್ರೀನಿವಾಸ್ ಇದ್ದರು.

ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ಹಾಗೂ ಸಿಹಿ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.