ಮೈಸೂರು: ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕಾದವರು ₹ 1 ಲಕ್ಷ ಠೇವಣಿ ಇಡಬೇಕು ಹಾಗೂ ₹ 15 ಕೋಟಿ ಬ್ಯಾಂಕ್ ಗ್ಯಾರಂಟಿ ತೋರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೇಳಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಆರೋಪಿಸಿದರು.
ಕೇವಲ ಕಾಂಗ್ರೆಸ್ ಮಾತ್ರವಲ್ಲ ಎಲ್ಲ ಮೂರು ಪಕ್ಷಗಳಲ್ಲೂಸ್ವಲ್ಪ ಹೆಚ್ಚೂಕಡಿಮೆಪರಿಸ್ಥಿತಿ ಹೀಗೆಯೇ ಇದೆ. ರಾಜಕೀಯ ಪಕ್ಷದೊಳಗಿನ ಭ್ರಷ್ಟಾಚಾರದ ಬಗ್ಗೆ ದನಿ ಎತ್ತುವವರು ಯಾರು ಎಂದು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ಮುಂದಿನ ಚುನಾವಣೆವರೆಗೂ ಬಸವರಾಜ ಬೊಮ್ಮಾಯಿ ಅವರೆ ಮುಖ್ಯಮಂತ್ರಿ. ನಾಯಕತ್ವ ಬದಲಾವಣೆ ಇಲ್ಲ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎಂದರು.
ಬಿಟ್ ಕಾಯಿನ್ ವಿಚಾರವಾಗಿ ಆರೋಪಿಸುವವರು ದಾಖಲೆಗಳನ್ನು ಬಹಿರಂಗಪಡಿಸಲಿ. ಆಗ ನಾನೆ ಸರ್ಕಾರದ ತನಿಖೆಗೆ ಆಗ್ರಹಿಸುವೆ ಎಂದು ಹೇಳಿದರು.
ಹಂಸಲೇಖ ಅವರು ಮಾತನಾಡಿರುವುದು ಅನಾವಶ್ಯಕವಾದರೂ ತಮ್ಮ ಹೇಳಿಕೆಗೆ ಕ್ಷಮೆ ಕೋರಿದ್ದಾರೆ. ಈ ವಿಷಯವನ್ನು ಇಲ್ಲಿಗೆ ಕೈಬಿಡುವುದು ಒಳ್ಳೆಯದು ಎಂದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಹಿಂದ ಮಾಡಿದರು. ಆದರೆ ಈಗ ಅವರೂ ಸಿದ್ದರಾಮಯ್ಯ ಅವರಿಂದ ದೂರ ಸರಿಯುತ್ತಿದ್ದಾರೆ. ದಲಿತರು ಮುಖ್ಯಮಂತ್ರಿಯಾಗಬೇಕು ಅನ್ನುವ ಅವರು ನಾಳೆ ನಾನೇ ದಲಿತ ಎನ್ನುತ್ತಾರೆ. ಹಾಗಾದರೆ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಏನು ಮಾಡಬೇಕು ಎಂದರು.
ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಸಂದೇಶ್ ನಾಗರಾಜ್ ಅವರಿಗೆ ಟಿಕೆಟ್ ನೀಡಬಾರದು. ಈಗಾಗಲೇ ಸಾಕಷ್ಟು ಕೆಲಸ ಮಾಡಿರುವ ಕೌಟಿಲ್ಯ ರಘು ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.