ADVERTISEMENT

ಹುಲಿ, ಆನೆಗಳು ಕಾಡಿನಿಂದ ಹೊರ ಬರಲು ಕಾರಣ ಏನ್ರಿ? ಅಧಿಕಾರಿಗಳ ಮೇಲೆ ಸಿಎಂ ಗರಂ

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ವೈಜ್ಞಾನಿಕ ಪರಿಹಾರ: ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 11:09 IST
Last Updated 10 ನವೆಂಬರ್ 2025, 11:09 IST
<div class="paragraphs"><p>ಸಭೆ</p></div>

ಸಭೆ

   

ಮೈಸೂರು: ‘ಮಾನವ-ವನ್ಯಜೀವಿ ಸಂಘರ್ಷ ತಡೆಗೆ ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡುಹಿಡಿಯಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.

ADVERTISEMENT

‘ಹುಲಿ, ಆನೆಗಳು ಅರಣ್ಯದಿಂದ ಹೊರ ಬರಲು ಕಾರಣವೇನು? ಇದನ್ನು ತಡೆಯಲು, ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು. ಲಂಟಾನಾ ತೆಗೆಸಬೇಕು. ಅರಣ್ಯದಲ್ಲಿ ಮೇವು ಬೆಳೆಸಬೇಕು. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ವನ್ಯಜೀವಿ– ಮಾನವ ಸಂಘರ್ಷ ತಪ್ಪಿಸಲು ಚರ್ಚಿಸುವ ಸಂಬಂಧ ಪ್ರತ್ಯೇಕ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ‌ ನಡೆಸಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು’ ಎಂದು ತಿಳಿಸಿದರು.

‘ಈಗಾಗಲೇ ಸಹಾಯವಾಣಿ ಆರಂಭಿಸಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾದ 7ಸಾವಿರ ಅರ್ಜಿಗಳಲ್ಲಿ 5,900 ಅರ್ಜಿಗಳು ತಿರಸ್ಕೃತವಾಗಿರುವುದಕ್ಕೆ ಕಾರಣವೇನು’ ಎಂದು ಮುಖ್ಯಮಂತ್ರಿ ಕೇಳಿದರು.

‘ಇವು 2019-20ರಿಂದ ತಿರಸ್ಕೃತವಾದವು. ತಿರಸ್ಕರಿಸುವಾಗ ಸ್ಪಷ್ಟ ಹಾಗೂ ನೈಜ ಕಾರಣ ನೀಡದಿದ್ದರೆ ಅಂತಹ ಅರ್ಜಿಗಳನ್ನು ಮರುಪರಿಶೀಲನೆಗೆ ಸ್ವೀಕರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು.

‘ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಪೂರೈಕೆ ಆಗುತ್ತಿದೆಯೇ?’ ಎಂದು ಕೇಳಿದ ಮುಖ್ಯಮಂತ್ರಿ, ‘ಹಾಡಿ ಜನರು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಬೇಕು’ ಎಂದು ಸೂಚಿಸಿದರು.

ಎಚ್‌.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ‘ಎಚ್.ಡಿ.ಕೋಟೆಯಲ್ಲಿ ಎಸಿಎಫ್‌ ಮತ್ತು ಆರ್‌ಎಫ್‌ಒ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ಸಮಸ್ಯೆಗಳು ಹೆಚ್ಚಾಗಿವೆ’ ಎಂದು ದೂರಿದರು.

‘ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ, ಕರ್ತವ್ಯ ಲೋಪದಿಂದ ಮಾನವ ಜೀವ ಹಾನಿಯಾದರೆ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಸಿಎಂ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದ ‘ಪ್ರಜಾವಾಣಿ’ ಒಳನೋಟ

ಮೈಸೂರು: ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ, ‘ಪ್ರಜಾವಾಣಿ’ಯಲ್ಲಿ ಅ.26ರಂದು ‘ಒಳನೋಟ’ದಲ್ಲಿ ಪ್ರಕಟವಾದ ‘ಬುಡಕಟ್ಟು ಜನರಿಗೆ ಕಳಪೆ ಆಹಾರ’ ವರದಿ ಪ್ರತಿಧ್ವನಿಸಿತು.

ವರದಿಯ ಪ್ರತಿಯನ್ನು ಪ್ರದರ್ಶಿಸಿದ ಮುಖ್ಯಮಂತ್ರಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಜೊತೆಗೆ ಅಧಿಕಾರಿಗಳು ಹಾಸ್ಟೆಲ್‌ಗೆ ದಿಢೀರ್‌ ಭೇಟಿ ಕೊಟ್ಟು ಪರಿಶೀಲಿಸಬೇಕು ಎಂದು ತಾಕೀತು ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.