ADVERTISEMENT

‘ಬದಲಾದ ಜೀವನಶೈಲಿಯಿಂದಲೇ ಅನಾರೋಗ್ಯ’

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌ ಅಭಿಮತ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 8:40 IST
Last Updated 13 ಡಿಸೆಂಬರ್ 2019, 8:40 IST
ಮೈಸೂರಿನ ವಿಜ್ಞಾನ ಭವನದಲ್ಲಿ ಗುರುವಾರ ನಡೆದ ಕ್ಯಾನ್ಸರ್‌ ಅರಿವು ಕುರಿತ ಕಾರ್ಯಾಗಾರದಲ್ಲಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಮಾತನಾಡಿದರು
ಮೈಸೂರಿನ ವಿಜ್ಞಾನ ಭವನದಲ್ಲಿ ಗುರುವಾರ ನಡೆದ ಕ್ಯಾನ್ಸರ್‌ ಅರಿವು ಕುರಿತ ಕಾರ್ಯಾಗಾರದಲ್ಲಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಮಾತನಾಡಿದರು   

ಮೈಸೂರು: ‘ಬದಲಾಗುತ್ತಿರುವ ಜೀವನಶೈಲಿ, ಸಾಂಕ್ರಾಮಿಕವಲ್ಲದ ಕಾಯಿಲೆಗಳ ಹೆಚ್ಚಳದಿಂದ ಹೃದಯ ರಕ್ತನಾಳದ ಕಾಯಿಲೆಗಳು, ಕ್ಯಾನ್ಸರ್, ಮಧುಮೇಹ, ಪಾರ್ಶ್ವವಾಯು ಹಾಗೂ ದೀರ್ಘಕಾಲದ ಉಸಿರಾಟದ ಕಾಯಿಲೆ ಸಮಸ್ಯೆಗಳನ್ನು ಕಡಿಮೆ ಹಾಗೂ ಮಧ್ಯಮ ವರಮಾನದ ರಾಷ್ಟ್ರಗಳು ಎದುರಿಸುತ್ತಿವೆ’ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ಹೇಳಿದರು.

ಮೈಸೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೆನೆಪೊಯ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ನಗರದ ವಿಜ್ಞಾನ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿದ ಅವರು ಮಾತನಾಡಿದರು.

‘ಹೆಚ್ಚಿನ ಆದಾಯವಿರುವ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕ್ಯಾನ್ಸರ್ ಪ್ರಮಾಣ ಕಡಿಮೆ ಇದೆ. ನಮ್ಮ ದೇಶದ ಪುರುಷರಲ್ಲಿ ಶ್ವಾಸಕೋಶದ ಕ್ಯಾನ್ಸರ್, ಹೊಟ್ಟೆಯ ಕ್ಯಾನ್ಸರ್, ಬಾಯಿಯ ಕ್ಯಾನ್ಸರ್‌ಗಳು ಹಾಗೂ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್‌ಗಳು ಹೆಚ್ಚಾಗಿ ಕಂಡುಬರುತ್ತಿದೆ’ ಎಂದು ಅವರು ಹೇಳಿದರು.

ADVERTISEMENT

‘ನಾವಿಂದು ಸಣ್ಣ ನೋವನ್ನು ನಿರ್ಲಕ್ಷಿಸಿದರೆ ಅದು ಮುಂದಿನ ಮೂರು ತಿಂಗಳಲ್ಲಿ ಕ್ಯಾನ್ಸರ್ ಆಗಿ ಪರಿಣಮಿಸುತ್ತಿದೆ. ಹಾಗಾಗಿ ಈ ಕಾರ್ಯಾಗಾರದ ಮೂಲಕ ಆರಂಭಿಕ ಹಂತದಲ್ಲೇ ಕ್ಯಾನ್ಸರನ್ನು ಪತ್ತೆ ಹಚ್ಚುವುದರ ಮೂಲಕ, ಮರಣವನ್ನು ತಡೆಗಟ್ಟಬಹುದು’ ಎಂದರು.

ಯೆನೆಪೊಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅಶ್ವಿನಿ ಮಾತನಾಡಿದರು. ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಬಿ.ಚಂದ್ರಶೇಖರ್, ಯೆನೆಪೊಯ ವಿಶ್ವವಿದ್ಯಾಲಯದ ಸರ್ಜಿಕಲ್ ಆರ್ಕಲಾಜಿ ವಿಭಾಗದ ಆರ್ಕಲಾಜಿಸ್ಟ್ ಡಾ.ಎಚ್‌.ಕೆ.ಅಮರ್‌ರಾವ್, ಯೆನೆಪೊಯ ಡೆಂಟಲ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಇಮ್ರಾನ್ ಪಾಷಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.