ADVERTISEMENT

‘ಸೋಂಕಿತರನ್ನು ಗೌರವದಿಂದ ಕಾಣಿ’

ವಿಶ್ವ ಏಡ್ಸ್ ದಿನದ ಆರೋಗ್ಯ ಅರಿವು ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 3:12 IST
Last Updated 12 ಡಿಸೆಂಬರ್ 2025, 3:12 IST
ಬೆಟ್ಟದಪುರದ ಡಿ.ಟಿ.ಎಂ.ಎನ್ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ತಾಲ್ಲೂಕು ಆರೋಗ್ಯ ಇಲಾಖೆ, ವಕೀಲರ ಸಂಘ ಹಾಗೂ ವಿಜಯ ಗಿರಿ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ವಿಶ್ವ ಏಡ್ಸ್ ದಿನದ ಆರೋಗ್ಯ ಅರಿವು ಕಾರ್ಯಕ್ರಮವನ್ನು ಹಿರಿಯ ನ್ಯಾಯಾಧೀಶ ಎಂ.ರಾಜು ಉದ್ಘಾಟಿಸಿದರು
ಬೆಟ್ಟದಪುರದ ಡಿ.ಟಿ.ಎಂ.ಎನ್ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ತಾಲ್ಲೂಕು ಆರೋಗ್ಯ ಇಲಾಖೆ, ವಕೀಲರ ಸಂಘ ಹಾಗೂ ವಿಜಯ ಗಿರಿ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ವಿಶ್ವ ಏಡ್ಸ್ ದಿನದ ಆರೋಗ್ಯ ಅರಿವು ಕಾರ್ಯಕ್ರಮವನ್ನು ಹಿರಿಯ ನ್ಯಾಯಾಧೀಶ ಎಂ.ರಾಜು ಉದ್ಘಾಟಿಸಿದರು   

ಬೆಟ್ಟದಪುರ: ಎಚ್ಐವಿ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಹಾಗೂ ಜಾಗೃತಿ ಮೂಡಿಸಿ ಮೂಢನಂಬಿಕೆಗಳನ್ನು ಹೋಗಲಾಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶ್ರೀನಿವಾಸ್ ಬಿ.ಕೆ. ತಿಳಿಸಿದರು.

ಗ್ರಾಮದ ಡಿ.ಟಿ.ಎಂ.ಎನ್ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ತಾಲ್ಲೂಕು ಆರೋಗ್ಯ ಇಲಾಖೆ, ವಕೀಲರ ಸಂಘ ಹಾಗೂ ವಿಜಯ ಗಿರಿ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ವಿಶ್ವ ಏಡ್ಸ್ ದಿನದ ಆರೋಗ್ಯ ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಎಚ್.ಐ.ವಿ ಪೀಡಿತರನ್ನು ಸಮಾಜ ನೋಡುವ ರೀತಿ ಅತಿದೊಡ್ಡ ಅಡೆತಡೆಯಾಗಿದೆ, ಈ ಭಯದಿಂದಲೇ ಜನರು ಪರೀಕ್ಷೆ ಮಾಡಿಸಿಕೊಳ್ಳಲು ಹಿಂಜರಿಯುತ್ತಾರೆ, ಸೋಂಕಿತರನ್ನು ಗೌರವದಿಂದ ಕಾಣುವುದು ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು. ಸೋಂಕು ಪೀಡಿತರಿಗೂ ಕೆಲಸದ ಹಕ್ಕು ಮತ್ತು ಸಾಮಾಜಿಕ ಭದ್ರತೆ ನೀಡುವುದರಿಂದ ಎಲ್ಲರಿಗೂ ಸಮಾನ ಹಕ್ಕು ನೀಡಿದಂತಾಗುತ್ತದೆ ಎಂದು ಹೇಳಿದರು.

ADVERTISEMENT

ಹಿರಿಯ ನ್ಯಾಯಾಧೀಶ ಎಂ.ರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಜನಸಾಮಾನ್ಯರು ಉತ್ತಮ ಜೀವನ ನಡೆಸಲು ಮಾನವ ಹಕ್ಕುಗಳು ಅತ್ಯಗತ್ಯ. ಆದ್ದರಿಂದ ಇತರರ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ತಡೆದು ರಕ್ಷಣೆ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ದೇಶ ಮತ್ತು ರಾಜ್ಯಮಟ್ಟದಲ್ಲಿ ರಚಿಸಿರುವ ಮಾನವ ಹಕ್ಕುಗಳ ಆಯೋಗಗಳು ಮಾನವ ಹಕ್ಕುಗಳ ಉಲ್ಲಂಘನೆ ತಡೆಯಲು ಶ್ರಮಿಸುತ್ತಿವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕೆಲಸಕ್ಕೆ ಮುಂದಾಗಬೇಕು ಎಂದರು.

ತಾಲ್ಲೂಕು ಆರೋಗ್ಯ ಶಿಕ್ಷಾಣಧಿಕಾರಿ ಲತಾ ಮಾತನಾಡಿ, ಬಡತನ, ಲಿಂಗ ತಾರತಮ್ಯ ಮತ್ತು ಶಿಕ್ಷಣದ ಕೊರತೆಯಿಂದಾಗಿ ಅನೇಕರಿಗೆ ಇಂದಿಗೂ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಗರ್ಭಿಣಿಯರಿಗೆ ಆರಂಭಿಕ ಹಂತದಲ್ಲೇ ತಪಾಸಣೆ ನಡೆಸಿ, ಚಿಕಿತ್ಸೆ ನೀಡುವ ಮೂಲಕ ಮುಂಬರುವ ಪೀಳಿಗೆಯನ್ನು ಏಡ್ಸ್ ಮುಕ್ತಗೊಳಿಸಬಹುದು ಎಂದು ತಿಳಿಸಿದರು.

ಸಿವಿಲ್ ಶ್ರೇಣಿ ನ್ಯಾಯಾಧೀಶ ಎಂ.ಆರ್.ಯೋಗೀಶ್, ವಕೀಲರ ಸಂಘದ ಅಧ್ಯಕ್ಷ ಧನಪಾಲ್, ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್, ಗ್ರಾ.ಪಂ ಅಧ್ಯಕ್ಷ ರಾಜಶೇಖರ್, ವೈದ್ಯಾಧಿಕಾರಿ ಪೂಜಾ, ವಕೀಲ ಬಿ.ಎನ್.ಹರೀಶ್, ಡಿಟಿಎಂಎನ್ ಪ್ರಾಂಶುಪಾಲ ಸತೀಶ್, ಐಸಿಟಿಸಿ ಆಪ್ತ ಸಮಾಲೋಚಕ ಪ್ರಕಾಶ್, ಸಂಸ್ಥೆಯ ಆಡಳಿತಾಧಿಕಾರಿ ನಟರಾಜ್, ವಿಜಯಗಿರಿ ಶಿಕ್ಷಣ ಸಂಸ್ಥೆ ನಿರ್ದೇಶಕ ವಿಜಯ ಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.