ಮೈಸೂರು: ಕೊರೊನಾದಿಂದ ಸಂಕಷ್ಟ ಅನುಭವಿಸುತ್ತಿರುವವರ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸರ್ಕಾರಿ ಕೆಲಸಗಳನ್ನು ತ್ವರಿತವಾಗಿ ಮಾಡುವ ಉದ್ದೇಶದಿಂದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಅ.5ರಿಂದ 11ರವರೆಗೆ `ಯೋಗ ಕ್ಷೇಮ ಯಾತ್ರೆ’ ಆಯೋಜಿಸಲಾಗಿದೆ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು.
ಒಂದು ವಾರದ ಅವಧಿಯಲ್ಲಿ ಕ್ಷೇತ್ರದ ವಿವಿಧ ವಾರ್ಡ್ಗಳಲ್ಲಿ ಜನರ ಮನೆ ಬಾಗಿಲಿಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸುವ ಜತೆಗೆ ಸೋಂಕಿತರ ಮನೆಗಳಿಗೆ ಆರೋಗ್ಯ ಕಿಟ್ ನೀಡಲಾಗುವುದು. ಆಯುಷ್ಮಾನ್ ಭಾರತ್ ಯೋಜನೆಯ ಸೌಲಭ್ಯ ಲಭಿಸದವರಿಗೆ ಅದನ್ನು ದೊರಕಿಸಿಕೊಡುವುದು. ಕೋವಿಡ್ನಿಂದ ಗುಣಮುಖರಾದವರಿಂದ ಪ್ಲಾಸ್ಮಾ ದಾನಕ್ಕೆ ಪ್ರೇರಿಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಕಸ ವಿಲೇವಾರಿ, ಸ್ವಚ್ಛತೆ, ಕುಡಿಯುವ ನೀರು, ಒಳಚರಂಡಿ, ರಸ್ತೆ ದುರವಸ್ತೆ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಜನರಿಂದ ಮಾಹಿತಿ ಸಂಗ್ರಹಿಸಿ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದರು.
ಅ.5 ರಿಂದ 11ರವರೆಗೆ ಬೆಳಿಗ್ಗೆ 7.30 ರಿಂದ 10.30ರವರೆಗೆ ವಾರ್ಡ್ ನಂ.53, 49, 54, 62, 64, 56, 43ರಲ್ಲಿ, ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ವಾರ್ಡ್ ನಂ. 52, 50, 60, 63, 57, 48ರಲ್ಲಿ, ಮಧ್ಯಾಹ್ನ 3 ರಿಂದ ಸಂಜೆ 6ರವರೆಗೆ ವಾರ್ಡ್ ನಂ.51, 55, 61, 65, 59 ಮತ್ತು 47ರಲ್ಲಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಸಿ.ಎಂಗೆ ಬಿಟ್ಟ ವಿಚಾರ: ಜಿಲ್ಲಾಧಿಕಾರಿ ವರ್ಗಾವಣೆ ಬಗ್ಗೆ ಪ್ರತಿಕ್ರಿಯಿಸಿದ ರಾಮದಾಸ್, ‘ವರ್ಗಾವಣೆ ಮಾಡುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟ ವಿಚಾರ. ಆಡಳಿತಾತ್ಮಕ ವಿಚಾರಕ್ಕೆ ಜಿಲ್ಲಾಧಿಕಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಯಾರೇ ಜಿಲ್ಲಾಧಿಕಾರಿ ಆದರೂ ಅವರೊಂದಿಗೆ ಸೇರಿ ಅಭಿವೃದ್ಧಿಗೆ ಶ್ರಮಿಸಲಾಗುವುದು’ಎಂದರು.
ಬಿಜೆಪಿ ಕೆ.ಆರ್. ಕ್ಷೇತ್ರದ ಅಧ್ಯಕ್ಷ ವಡಿವೇಲು, ಪ್ರಧಾನ ಕಾರ್ಯದರ್ಶಿ ನೂರ್ ಫಾತಿಮಾ, ಕಾರ್ಯದರ್ಶಿ ನಾಗೇಂದ್ರ ಕುಮಾರ್, ಪ್ರಸಾದ್ ಬಾಬು, ಉಪಾಧ್ಯಕ್ಷ ಸಂತೋಷ್ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.