ADVERTISEMENT

ಅನುದಾನ ದುರ್ಬಳಕೆ: ಕ್ರಮ ಒತ್ತಾಯ

​ಪ್ರಜಾವಾಣಿ ವಾರ್ತೆ
Published 20 ಜೂನ್ 2012, 8:30 IST
Last Updated 20 ಜೂನ್ 2012, 8:30 IST
ಅನುದಾನ ದುರ್ಬಳಕೆ: ಕ್ರಮ ಒತ್ತಾಯ
ಅನುದಾನ ದುರ್ಬಳಕೆ: ಕ್ರಮ ಒತ್ತಾಯ   

ರಾಯಚೂರು: ಮಾನ್ವಿ ತಾಲ್ಲೂಕಿನ ಮಲ್ಲಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿಆರ್‌ಜಿಎಫ್ ಹಾಗೂ ಇನ್ನಿತರ ಯೋಜನೆಯಡಿ  ನಿಯಮ ಉಲ್ಲಂಘನೆ ಮಾಡಿ ಅನುದಾನ ದುರ್ಬಳಕೆ ಮಾಡಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ ಬಣ) ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಂಗಳವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು.

ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.  ಅನುದಾನ ದುರ್ಬಳಕೆ ಸಂಬಂಧಿಸಿದಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಿದರು.

ಮಾನ್ವಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಯ್ಯ ಹಿರೇಮಠ ಅವರು ಈಚೆಗೆ ಬೀದರ್ ಜಿಲ್ಲೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಮತ್ತೆ ಮರಳಿ ಮಾನ್ವಿ ತಾಪಂ ಕಚೇರಿಗೆ ವರ್ಗಾವಣೆಯಾಗಿದ್ದಾರೆ. ಅವರು ನಡೆಸಿದ ಅವ್ಯವಹಾರದ ಬಗ್ಗೆ ಲೋಕಾಯುಕ್ತರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ತಾಪಂ ಇಒ ಅವರನ್ನು ತನಿಖೆಗೊಳಪಡಿಸಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ವಿಭಾಗೀಯ ಅಧ್ಯಕ್ಷ ಬಸವರಾಜ ಸಾಸಲಮರಿ, ಜಿಲ್ಲಾಧ್ಯಕ್ಷ ಅಶೋಕ ಜಂಜಲದಿನ್ನಿ ಅವರು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಕಪ್ಪ ಯಾತಗಲ್, ಉಪಾಧ್ಯಕ್ಷ ಸಂಗಮೇಶ ಕರಿಬಿಲ್ಕಕರ್,  ಎಂ.ಮನೋಹರ ಸಿರವಾರ, ಬಿ.ಮಲ್ಲಪ್ಪ ಸಿರವಾರ, ಮಲ್ಲಪ್ಪ ಮಲ್ಲಟ, ಅಮರೇಶ ಮಲ್ಲಟ, ನಾಗರಾಜ ಸಿರವಾರ, ಹುಸೇನಪ್ಪ ಸಿರವಾರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.