ADVERTISEMENT

ಆರಂಭವಾದ ಗೆಲುವಿನ ಲೆಕ್ಕಾಚಾರ

​ಪ್ರಜಾವಾಣಿ ವಾರ್ತೆ
Published 14 ಮೇ 2018, 10:04 IST
Last Updated 14 ಮೇ 2018, 10:04 IST

ಸಿಂಧನೂರು: ಹದಿನೈದನೇ ವಿಧಾನಸಭೆ ಚುನಾವಣೆಯ ಮತದಾನ ಶನಿವಾರ ಮುಗಿದಿದ್ದು, ಈಗ ಎಲ್ಲರ ಚಿತ್ತ ಮೇ 15 ರಂದು ಪ್ರಕಟವಾಗಲಿರುವ ಫಲಿತಾಂಶದತ್ತ ನೆಟ್ಟಿದೆ.

ಮತದಾರರ ತೀರ್ಮಾನ ಈಗಾಗಲೇ ಇವಿಎಂಗಳಲ್ಲಿ ಭದ್ರವಾಗಿದ್ದು, ಜನಾದೇಶ ತಿಳಿದುಕೊಳ್ಳಲು ಅಭ್ಯರ್ಥಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಶಾಸಕ ಹಂಪನಗೌಡ ಬಾದರ್ಲಿ ಈ ಬಾರಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಾರೆ. ಐದು ವರ್ಷಗಳ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದ ಜನ ಮೆಚ್ಚಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಿಂಧನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ₹1,500 ಕೋಟಿ ನೀಡಿದೆ ಎಂದು ಗೆಲುವಿನ ವಿಶ್ವಾಸವನ್ನು ಸಮರ್ಥಿಸಿಕೊಂಡರು.

ಜೆಡಿಎಸ್ ನಿಂದ ಸ್ಪರ್ಧಿಸಿರುವ ವೆಂಕಟರಾವ್ ನಾಡಗೌಡ ಅವರೂ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಐದು ವರ್ಷ ಆಡಳಿತ ನಡೆಸಿದ ಶಾಸಕ ಹಂಪನಗೌಡ ಬಾದರ್ಲಿ ಅವರ ವೈಫಲ್ಯತೆ, ಎಡದಂಡೆ ನಾಲೆಯ ನೀರಿನ ನಿರ್ವಹಣೆಯಲ್ಲಿ ಸಮಸ್ಯೆಯಾಗಿ ರೈತರು ಅಪಾರ ಪ್ರಮಾಣದಲ್ಲಿ ನಷ್ಟ ಅನುಭವಿಸಿರುವುದು,
ಮತ್ತು ನಗರದಲ್ಲಿ ವಾರಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದರಿಂದ ಜನ ಬೇಸತ್ತಿದ್ದಾರೆ. ಹೀಗಾಗಿ ಜನ ಕೈಬಿಡುವುದಿಲ್ಲ ಎಂಬ ಆಶಾಭಾವನೆ ಅವರದ್ದು.

ಬಿಜೆಪಿಯಿಂದ ಸ್ಪರ್ಧಿಸಿರುವ ಕೊಲ್ಲಾ ಶೇಷಗಿರಿರಾವ್ ಅವರು ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತ, ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ನೀಡಿರುವ ಜನಪರ ಯೋಜನೆಗಳನ್ನು ಮೆಚ್ಚಿ ಜನ ತಮಗೆ ಬೆಂಬಲಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಮೂರು ಪಕ್ಷಗಳನ್ನು ಹೊರತುಪಡಿಸಿ ವಿವಿಧ ಪಕ್ಷ ಹಾಗೂ ಪಕ್ಷೇತರರಾಗಿ ಒಟ್ಟು 14 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಿರುಬಿಸಿಲನ್ನು ಲೆಕ್ಕಿಸದೆ ಅಭ್ಯರ್ಥಿಗಳು ಕ್ಷೇತ್ರದಾದ್ಯಂತ ಪ್ರಚಾರ ನಡೆಸಿದ್ದ ಅಭ್ಯರ್ಥಿಗಳು ಭಾನುವಾರ ವಿಶ್ರಾಂತಿಯ ಮೊರೆ ಹೋಗಿದ್ದು ಕಂಡು ಬಂತು.

ಶಾಸಕ ಬಾದರ್ಲಿ ತಮ್ಮ ನಿವಾಸದಲ್ಲಿ ಆಪ್ತರು ಮತ್ತು ಬೆಂಬಲಿಗರೊಂದಿಗೆ ಸೋಲು ಗೆಲುವಿನ ಕುರಿತು ಚರ್ಚೆ ನಡೆಸಿದರು.

ಬಿಜೆಪಿ ಅಭ್ಯರ್ಥಿ ಕೊಲ್ಲಾ ಶೇಷಗಿರಿರಾವ್ ತಮ್ಮ ಪಕ್ಷದ ಕಚೇರಿಯಲ್ಲಿ ಹಾಗೂ ಜೆಡಿಎಸ್ ಅಭ್ಯರ್ಥಿ ವೆಂಕಟರಾವ್ ನಾಡಗೌಡ ಜವಳಗೇರಿಯ ತಮ್ಮ ನಿವಾಸದಲ್ಲಿ ಆಪ್ತರೊಂದಿಗೆ ಕಾಲ ಕಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.