ರಾಯಚೂರು: ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ಪಶು ಸಂಗೋಪನೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸರಿಯಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸದ ತೋಟಗಾರಿಕೆ ಮತ್ತು ಪಶುಸಂಗೋಪಣೆ ಇಲಾಖೆಗಳ ಇಬ್ಬರು ಅಧಿಕಾರಿಗಳಿಗೆ ಕಾರಣ ಕೇಳಿ ಶೋಕಾಸ್ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್ಸಿಪಿ ಹಾಗೂ ಟಿಎಸ್ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೃಷಿ ವಿಶ್ವವಿದ್ಯಾಲಯದಲ್ಲಿ ಯೋಜನೆ ಸರಿಯಾಗಿ ಅನುಷ್ಠಾನ ಮಾಡುತ್ತಿಲ್ಲ.
ಶಾಲೆ, ವಸತಿ ನಿಲಯ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಎ ಮತ್ತು ಬಿ ಶ್ರೇಣಿ ಅಧಿಕಾರಿಗಳು ತಿಂಗಳಲ್ಲಿ ಎರಡು ಬಾರಿ ಭೇಟಿ ನೀಡಬೇಕು. ಅಲ್ಲಿನ ಊಟ ಮಾಡುವುದರ ಜೊತೆಗೆ ಆಹಾರದ ಗುಣಮಟ್ಟ ಮತ್ತು ಇತರೆ ಸಮಸ್ಯೆಗಳಿದ್ದರೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಬೇಕು ಎಂದರು.
ಜಿಲ್ಲಾಮಟ್ಟದ ಅಧಿಕಾರಿಗಳು ತಿಂಗಳಲ್ಲಿ ಎರಡು ಬಾರಿ ಭೇಟಿ ನೀಡಿರುವ ವಿವರವನ್ನು ತಿಂಗಳ ಕೊನೆಯಲ್ಲಿ ನೀಡಬೇಕು. ಆ ತಿಂಗಳಲ್ಲಿ ಭೇಟಿ ನೀಡಲು ಆಗದಿದ್ದಾಗ, ಮುಂದಿನ ತಿಂಗಳಲ್ಲಿ ನಾಲ್ಕು ಸಲ ಭೇಟಿ ನೀಡುವಂತೆ ಇಲಾಖೆಯ ಅಧಿಕಾರಿಗಳು ಸೂಚಿಸಬೇಕು ಎಂದು ಹೇಳಿದರು.
ಕೆಲ ಅಂಗನವಾಡಿ ಕೇಂದ್ರಗಳಲ್ಲಿ 10 ಮಕ್ಕಳಿದ್ದರೆ, 40 ಮಕ್ಕಳ ಹಾಜರಾತಿ ನಮೂದಿಸುತ್ತಾರೆ. ಆದ್ದರಿಂದ ಅಧಿಕಾರಿಗಳು ಭೇಟಿ ನೀಡಿದಾಗ ದಾಖಲಾತಿಗಳನ್ನು ಪರಿಶೀಲನೆ ನಡೆಸಬೇಕು. ಜೊತೆಗೆ ಮುಖ್ಯವಾಗಿರುವ ಕೆಲವು ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಭಿರಾಂ ಜಿ.ಶಂಕರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕಿ ಆರ್.ಇಂದಿರಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಎಂ.ಕಿರಣಕುಮಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.