ADVERTISEMENT

ಗುಣಾತ್ಮಕ ಶಿಕ್ಷಣಕ್ಕಾಗಿ ಶೈಕ್ಷಣಿಕ ಹಬ್ಬ: ಬೋಸರಾಜು

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2017, 5:38 IST
Last Updated 19 ಡಿಸೆಂಬರ್ 2017, 5:38 IST
ಎನ್‌.ಎಸ್‌.ಬೋಸರಾಜು
ಎನ್‌.ಎಸ್‌.ಬೋಸರಾಜು   

ರಾಯಚೂರು: ಗುಣಾತ್ಮಕ ಶಿಕ್ಷಣ, ವೈಜ್ಞಾನಿಕ ಮನೋಭಾವ ಹಾಗೂ ಸಮಾನ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸುವ ಉದ್ದೇಶಕ್ಕಾಗಿ ‘ಟೀಚರ್‌’ ಮಾಸಪತ್ರಿಕೆಯಿಂದ 2018 ರ ಜನವರಿ 5 ಮತ್ತು 6 ರಂದು ರಾಯಚೂರಿನಲ್ಲಿ ಎರಡನೇ ಬಾರಿಗೆ ರಾಜ್ಯಮಟ್ಟದ ಶೈಕ್ಷಣಿಕ ಹಬ್ಬ ಆಯೋಜಿಸಲಾಗುತ್ತಿದೆ ಎಂದು ಹಬ್ಬದ ಸ್ವಾಗತ ಸಮಿತಿ ಅಧ್ಯಕ್ಷ ಮತ್ತು ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌. ಬೋಸರಾಜು ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಂಡಿತ್‌ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯುವ ಶೈಕ್ಷಣಿಕ ಹಬ್ಬದಲ್ಲಿ ರಾಯಚೂರು ಜಿಲ್ಲೆಯ 200, ಹೊರರಾಜ್ಯಗಳಿಂದ 50, ವಿವಿಧ ಜಿಲ್ಲೆಗಳಿಂದ 800 ಪ್ರತಿನಿಧಿಗಳು ಸೇರಿ ಒಟ್ಟು 1,250 ಪ್ರತಿನಿಧಿಗಳು ಹಬ್ಬದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. 2005ರಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಹಬ್ಬಕ್ಕೂ ನಾನು ಸ್ವಾಗತ ಸಮಿತಿ ಅಧ್ಯಕ್ಷನಾಗಿದ್ದೆ’ ಎಂದು ತಿಳಿಸಿದರು.

ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ದೃಷ್ಟಿಕೋನ ನೀಡುವ ಭಾಗವಾಗಿ ಈ ಹಬ್ಬ ಆಯೋಜಿಸಲಾಗುತ್ತಿದೆ. ಎರಡು ದಿನಗಳ ಕಾರ್ಯಕ್ರಮದಲ್ಲಿ ನಾಲ್ಕು ಗೋಷ್ಠಿಗಳು ನಡೆಯಲಿವೆ. ಶೈಕ್ಷಣಿಕ ಹಬ್ಬದ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ ಸೇಟ್‌ ಅವರನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.

ADVERTISEMENT

ಈ ಶೈಕ್ಷಣಿಕ ಹಬ್ಬಕ್ಕೆ ನಗರಸಭೆ ಪ್ರಭಾರಿ ಅಧ್ಯಕ್ಷ ಜಯಣ್ಣ ಅವರು ಪೋಷಕರಾಗಿದ್ದು, ಸಂಸದ ಬಿ.ವಿ.ನಾಯಕ, ಶಾಸಕರಾದ ಡಾ.ಶಿವರಾಜ ಪಾಟೀಲ, ತಿಪ್ಪರಾಜು ಹವಾಲ್ದಾರ್‌, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಅವರು ಮಹಾಪೋಷಕರಾಗಿದ್ದಾರೆ. ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್‌ ಕರೀಂ, ಎಪಿಎಂಸಿ ಅಧ್ಯಕ್ಷ ಅಮರೇಗೌಡ ಹಂಚಿನಾಳ ಉಪಾಧ್ಯಕ್ಷರಾಗಿದ್ದಾರೆ. ಪತ್ರಕರ್ತ ಕೆ.ಸತ್ಯನಾರಾಯಣ ಕಾರ್ಯದರ್ಶಿಯಾಗಿದ್ದಾರೆ ಎಂದು ತಿಳಿಸಿದರು.

ಶೈಕ್ಷಣಿಕ ಹಬ್ಬದಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಎರಡು ದಿನಗಳ ಒಒಡಿ ಸಿಗಲಿದೆ. ಶಿಕ್ಷಕರು, ಶಿಕ್ಷಣ ಪ್ರೇಮಿಗಳು, ಶಿಕ್ಷಕ ಸಂಘದ ಪದಾಧಿಕಾರಿಗಳೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.