ರಾಯಚೂರು: ನಗರ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿಲ್ಲ ಎಂದು ಪರಾಜಿತ ಅಭ್ಯರ್ಥಿ ಸೈಯದ್ ಯಾಸೀನ್ ಆರೋಪಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಿಂಧನೂರು ಹಾಗೂ ಮಸ್ಕಿ ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷದ ಪರವಾಗಿ ಯಾವುದೇ ಕಾರ್ಯ ಮಾಡಿಲ್ಲ ಎಂದು ಆಪಾದಿಸಿದರು.
ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದವರ ಬಗ್ಗೆ ಹೈಕಮಾಂಡ್ಗೆ ದೂರು ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಅಂತಹವರಿಗೆ ಸ್ಥಾನಮಾನಗಳನ್ನು ನೀಡದಂತೆ ಒತ್ತಾಯಿಸಲಾಗುತ್ತದೆ ಎಂದು ಹೇಳಿದರು.
ನಗರದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಶಾಸಕ ಡಾ.ಶಿವರಾಜ ಪಾಟೀಲ ವಿಫಲರಾಗಿದ್ದಾರೆ. ಚುನಾವಣೆಯಲ್ಲಿ ಜನರ ನೀಡಿರುವ ತೀರ್ಪು ಒಪ್ಪಿಕೊಂಡು ಜನರ ಪರವಾದ ಕೆಲಸವನ್ನು ಮುಂದು
ವರೆಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.
10 ವರ್ಷಕ್ಕೂ ಮೇಲ್ಪಟ್ಟು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರಸಭೆ, ಜಿಲ್ಲಾ ಪಂಚಾಯಿತಿ ಎಂಜಿನಿಯರ್ಗಳು ಹಾಗೂ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮತ್ತು ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿರುವುದರಿಂದ ಹಾಲಿ ಮತ್ತು ಮಾಜಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು. ಜಿ.ಬಸವರಾಜರೆಡ್ಡಿ, ಜಿಂದಪ್ಪ,ಸುಧೀರ ಜಾಗೀರದಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.