ADVERTISEMENT

ದಾಕ್ಷಿಣ್ಯಕ್ಕೆ ಒಳಗಾಗದೆ ಮತ ಚಲಾಯಿಸಿ: ಡಿಸಿ

​ಪ್ರಜಾವಾಣಿ ವಾರ್ತೆ
Published 25 ಜನವರಿ 2011, 19:30 IST
Last Updated 25 ಜನವರಿ 2011, 19:30 IST

ಶಿವಮೊಗ್ಗ: ಮತದಾರರು ಪ್ರತಿ ಚುನಾವಣೆಯಲ್ಲಿ ಧರ್ಮ, ಜಾತಿ, ಮತ, ಭಾಷೆ, ಬಣ್ಣಗಳ ಪ್ರೇರೇಪಣೆ ಮತ್ತು ದಾಕ್ಷಿಣ್ಯಕ್ಕೆ ಒಳಗಾಗದೆ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ವಿ.ಪೊನ್ನುರಾಜ್ ಕರೆ ನೀಡಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ನಡೆದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರೆಲ್ಲರೂ ದೇಶದ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯಬೇಕು ಎಂದರು.

ಮುಂಬರುವ ದಿನಗಳಲ್ಲಿ ಭಾರತ ಚುನಾವಣಾ ಆಯೋಗವು ಆನ್‌ಲೈನ್ ಮತದಾನ ವ್ಯವಸ್ಥೆಯನ್ನು ಜಾರಿಗೊಳಿಸುವ ಉದ್ದೇಶ ಹೊಂದಿದ್ದು, ಅದರ ಪೂರ್ವಸಿದ್ಧತೆಯಾಗಿ ಹಾಗೂ ಚುನಾವಣಾ ಅಕ್ರಮಗಳ ತಡೆಗೆ ಮತದಾರರಿಗೆ ಗುರುತಿನ ಚೀಟಿ ನೀಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮತದಾನ ದಿನಾಚರಣೆ ಅಂಗವಾಗಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಗದು ಪುರಸ್ಕಾರ ಹಾಗೂ ಪ್ರಶಸ್ತಿಪತ್ರ ವಿತರಿಸಲಾಯಿತು. ನೂತನವಾಗಿ ಮತಚಲಾಯಿಸಲು ಹೆಸರು ನೋಂದಾಯಿಸಿದ ಮತದಾರರಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಲಾಯಿತು.

ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ, ಉಪ ವಿಭಾಗಾಧಿಕಾರಿ ಎಂ.ಎಲ್. ವೈಶಾಲಿ, ತಹಶೀಲ್ದಾರ್ ಚಂದ್ರಶೇಖರ್ ಉಪಸ್ಥಿತರಿದ್ದರು. ಪೌರಾಯುಕ್ತ ಬಿ. ಜಯಣ್ಣ ಸ್ವಾಗತಿಸಿದರು. ಚುನಾವಣಾ ಶಾಖೆ ತಹಶೀಲ್ದಾರ್ ಶ್ರೀಕಂಠಯ್ಯ ಪ್ರತಿಜ್ಞಾವಿಧಿ ಬೋಧಿಸಿದರು. ಎಂಜಿನಿಯರ್ ಗಣೇಶ್‌ರಾವ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.