ರಾಯಚೂರು: ಪ್ರಶ್ನೆ ಮಾಡುವ ಮನೋಭಾವ ಎಲ್ಲರಲ್ಲೂ ಬರಬೇಕು. ಈ ದಿಶೆಯಲ್ಲಿ ಜಾಗೃತಿ ಮಾಡಬೇಕು. ಇದರಿಂದ, ದೌರ್ಜನ್ಯ, ತಾರತಮ್ಯ, ವಂಚನೆಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಎಂ.ಕೆ ಭಾಸ್ಕರರಾವ್ ಹೇಳಿದರು.
ಇಲ್ಲಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆವಿಷ್ಕಾರ ಪ್ರಗತಿಪರ ಸಾಂಸ್ಕೃತಿಕ ವೇದಿಕೆ ಹಾಗೂ ಪಂಡಿತ ತಾರಾನಾಥ ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ 2ನೇ ರಾಯಚೂರು ಸಾಂಸ್ಕೃತಿಕ ಜನೋತ್ಸವ ಉದ್ಘಾಟಿಸಿ ಮಾತನಾಡಿದರು.
ಈ ಜಿಲ್ಲೆಯ ಜನ ಸಹನೆ ಮನೋಭಾವ ಉಳ್ಳವರು. ಹಾಗಂತ ಅದೇ ಅವರ ದೌರ್ಬಲ್ಯವಲ್ಲ. ನೀರಾವರಿ ಕಾಲುವೆ ಸಮಸ್ಯೆ, ಮೂಲಸೌಕರ್ಯ ಸೇರಿದಂತೆ ಇನ್ನೂ ಅನೇಕ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಆಳುವ ವರ್ಗ ಇದನ್ನು ಕಣ್ಣಲ್ಲಿ ಕಣ್ಣಿಟ್ಟು ಗಮನಿಸಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.
ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಸ್ವಚ್ಛ ವಿಚಾರಗಳ ಚರ್ಚೆಗಳಿಂದ ಕೂಡಿಕೊಂಡಿರಬೇಕು. ಅಂದಾಗ ಅಭಿವ್ಯಕ್ತ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ಅಭಿವ್ಯಕ್ತಿ ಸ್ವಾತಂತ್ರಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಇರಬೇಕು ಎಂದರು.
ಆವಿಷ್ಕಾರದ ಜಿಲ್ಲಾ ಸಂಚಾಲಕ ಚನ್ನಬಸವ ಜಾನೇಕಲ್ ಅಧ್ಯಕ್ಷತೆ ವಹಿಸಿದ್ದರು. ಪಂಡಿತ ತಾರಾನಾಥ ಸಾಂಸ್ಕೃತಿಕ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಶರಣಪ್ಪ ಉದ್ಬಾಳ, ತಾರಾನಾಥ ಸಾಂಸ್ಕೃತಿಕ ವೇದಿಕೆಯ ಕಾರ್ಯದರ್ಶಿ ಸರೋಜಾ ಗೋನವಾರ ಇದ್ದರು. ಮಹೇಶ ಚೀಕಲಪರ್ವಿ ಪ್ರಾಸ್ತಾವಿಕ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.