ADVERTISEMENT

‘ಬರಹಗಾರರಿಂದ ಸಮಾಜ ತಿದ್ದುವ ಕೆಲಸ ನಡೆಯಲಿ’

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 12:10 IST
Last Updated 21 ಮಾರ್ಚ್ 2018, 12:10 IST

ಮಾನ್ವಿ: ‘ಬರಹಗಾರರಿಂದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮತ್ತು ಸಮಾಜ ತಿದ್ದುವ ಕೆಲಸ ಅಗತ್ಯ’ ಎಂದು ಲೇಖಕಿ ಡಾ.ಗಂಗಮ್ಮ ಸತ್ಯಂಪೇಟೆ ಹೇಳಿದರು.

ಸೋಮವಾರ ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಮೇಶಬಾಬು ಯಾಳಗಿ ಅವರ ‘ಮಥನದ ನವನೀತ’ ಕೃತಿ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪುಸ್ತಕ ಬರೆಯುವುದು ಸುಲಭದ ಕೆಲಸವಲ್ಲ. ಬರಹಗಾರ ಸಮಾಜದ ಆಗುಹೋಗುಗಳನ್ನು ಸೂಕ್ಷ್ಮವಾಗಿ ಗಮನಿಸಿ ತನ್ನ ಸಾಹಿತ್ಯದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕು. ಬರಹಗಾರನಿಗೆ ಸಾಮಾಜಿಕ ಜವಾಬ್ದಾರಿ ಇರಬೇಕು. ಬರವಣಿಗೆಯಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ’ ಎಂದು ಅವರು ಅಭಿಪ್ರಾಯಪಟ್ಟರು.

ADVERTISEMENT

ಬಾಲಕಿಯರ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕ ರೇವಣಸಿದ್ದಯ್ಯ ಹಿರೇಮಠ ಮಾತನಾಡಿ,‘ ಮೊಬೈಲ್‌, ಟಿ.ವಿ ಹಾವಳಿಯಿಂದ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು, ಯುವಕರು ಉತ್ತಮ ವ್ಯಕ್ತಿತ್ವ ಬೆಳವಣಿಗೆ ಮತ್ತು ಜ್ಞಾನವೃದ್ಧಿಗಾಗಿ ಪುಸ್ತಕಗಳನ್ನು ಕೊಂಡು ಓದುವ ಪ್ರವೃತ್ತಿ ರೂಢಿಸಿಕೊಳ್ಳಬೇಕು’ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಬಸವಪ್ರಭು ಪಾಟೀಲ್‌ ಬೆಟ್ಟದೂರು ಕಾರ್ಯಕ್ರಮ ಉದ್ಘಾಟಿಸಿದರು.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮಹಾಂತೇಶ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಲ್ಮಠದ ಪೀಠಾಧ್ಯಕ್ಷ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೃತಿಯ ಲೇಖಕ ರಮೇಶಬಾಬು ಯಾಳಗಿ, ಡಾ.ಪ್ರಜ್ಞಾ ಹರಿಪ್ರಸಾದ, ಪುರಸಭೆಯ ಮುಖ್ಯಾಧಿಕಾರಿ ವೆಂಕಟೇಶ, ಕಸಾಪ ತಾಲ್ಲೂಕು ಅಧ್ಯಕ್ಷ ಮೂಕಪ್ಪ ಕಟ್ಟಿಮನಿ, ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಪರಮೇಶ, ಕನ್ನಡ ಜಾನಪದ ಪರಿಷತ್‌ ಅಧ್ಯಕ್ಷ ತಾಯಪ್ಪ ಬಿ.ಹೊಸೂರು, ಪಕ್ಷಿಪ್ರೇಮಿ ಸಲಾವುದ್ದೀನ್‌, ಎಚ್‌.ಶರ್ಪುದ್ದೀನ್‌ ಪೋತ್ನಾಳ, ಅಮ್ಜದ್‌ ಖಾನ್‌, ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಈ.ನರಸಿಂಹ, ಕಾರ್ಯದರ್ಶಿ ಕೆ.ವಿಜಯಲಕ್ಷ್ಮೀ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.