ಸಿಂಧನೂರು (ರಾಯಚೂರು ಜಿ): ತಮಗೆ ಶಾಸಕ ವೆಂಕಟರಾವ್ ನಾಡಗೌಡ, ಅವರ ಸಹೋದರ ಬಸವರಾಜ ನಾಡಗೌಡ ಮತ್ತವರ ಬೆಂಬಲಿಗರು ಜೀವ ಬೆದರಿಕೆ ಹಾಕಿದ್ದಾರೆ ಎಂದು ತಾಲ್ಲೂಕಿನ ಜವಳಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗುರುರಾಜ ದೇಸಾಯಿ ಬಳಗಾನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಸಬ್ ಇನ್ಸ್ಪೆಕ್ಟರ್ ಬಾಳನಗೌಡ ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿಬ್ಬಂದಿಯ ವರ್ಗಾವಣೆ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ದೂರವಾಣಿಯಲ್ಲಿ ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಗುರುರಾಜ ದೇಸಾಯಿ ದೂರಿನಲ್ಲಿ ತಿಳಿಸಿದ್ದಾರೆ.
ಮಹಿಳಾ ಸಿಬ್ಬಂದಿಗೆ ಕಿರುಕುಳ: ವೈದ್ಯಾಧಿಕಾರಿ ಡಾ.ಗುರುರಾಜ ದೇಸಾಯಿ ನೀಡಿರುವ ಕಿರುಕುಳದಿಂದ ಬೇಸತ್ತು ಆಸ್ಪತ್ರೆಯ ಮಹಿಳಾ ಸಿಬ್ಬಂದಿ ತಮ್ಮ ಬಳಿಗೆ ಬಂದು ಕಷ್ಟ ಹೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವರ್ತನೆಯನ್ನು ಪ್ರಶ್ನಿಸಿದ್ದಕ್ಕೆ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದರೆ ಮಾಡುವುದೇನಿದೆ ಎಂದು ಶಾಸಕ ವೆಂಕಟರಾವ್ ನಾಡಗೌಡ ಅವರು `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿದರು.
ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡಿರುವ ಮತ್ತು ತಮ್ಮ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ ವಿಧಾನಸಭಾ ಅಧ್ಯಕ್ಷರ ಗಮನಕ್ಕೆ ತರುವುದಾಗಿ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.