ರಾಯಚೂರು: ಶೈಕ್ಷಣಿಕ ಅಭಿವೃದ್ಧಿ ಸಾಧಿಸುವ ಮೂಲಕ ದಲಿತ ಜನಾಂಗ ಉನ್ನತ ಸ್ಥಾನ ಅಲಂಕರಿಸಿದಾಗ ಮಾತ್ರ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಕನಸು ನನಸಾಗಿಸಲು ಸಾಧ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಗುರುವಾರ ಇಲ್ಲಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಡಾ.ಅಂಬೇಡ್ಕರ್ ಜನ್ಮದಿನಾಚರಣೆ ಸಮಿತಿಯು ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು."
ಸ್ವಾತಂತ್ರ್ಯ ಬಂದು 60 ವರ್ಷದ ಬಳಿಕವೂ ಅಸ್ಪೃಶ್ಯತೆ ಆಚರಣೆ ಅನೇಕ ಕಡೆ ಮುಂದುವರಿದಿದೆ. ಇದರ ನಿರ್ಮೂಲನೆಗೆ ಸಂಘಟಿತ ಪ್ರಯತ್ನ ಅವಶ್ಯಕ ಎಂದರು. ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ದೂರದೃಷ್ಟಿಯಿಂದ ಈ ದೇಶದಲ್ಲಿ ದಲಿತರ ಪರಿಸ್ಥಿತಿ ಸುಧಾರಿಸಿದೆ. ಸಂವಿಧಾನಬದ್ಧ ಸೌಲಭ್ಯ ಪಡೆದು ಅಭಿವೃದ್ಧಿ ಹೊಂದಿದ ಜನತೆ, ಅಧಿಕಾರಿಗಳು, ಜನಪ್ರತಿನಿಧಿಗಳು ನಿರಂತರವಾಗಿ ದಲಿತರ ಏಳ್ಗೆಗೆ ಶ್ರಮಿಸಬೇಕು ಎಂದು ಹೇಳಿದರು.
ಶಾಸಕ ಸಯ್ಯದ್ ಯಾಸಿನ್ ಅಧ್ಯಕ್ಷತೆ ವಹಿಸಿದ್ದರು. ಆಯುಷ್ಮಾನ್ ಸಂಘಾನಂದ ಬಂತೇಜಿ ಅವರಿಂದ ಬುದ್ಧ ಮತ್ತು ಧಮ್ಮ ವಂದನೆ ನಡೆಯಿತು. ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅತಿಥಿಗಳು ಮಾಲಾರ್ಪಣೆ ಮಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ, ವಿವಿಧ ಇಲಾಖೆಯಿಂದ ಫಲಾನುಭವಿಗಳಿಗೆ ಸವಲತ್ತು ವಿತರಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.