ರಾಯಚೂರು: ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೂ ಯೋಜನೆಗಳನ್ನು ತಲುಪಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಟ್ ಹೇಳಿದರು. ಮಾನ್ವಿ ತಾಲ್ಲೂಕು ಕಲ್ಲೂರು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಹಾಗೂ ವಸತಿ ಗೃಹಗಳ ನಿರ್ಮಾಣಕ್ಕೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಬಡತನ ರೇಖೆಗಿಂತ ಕೆಳಗಿರುವ ಸಮಾಜದ ಕಟ್ಟಕಡೆಯ ಜನರಿಗೆ ಲಾಭವಾಗಲು ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಡಜನರ ಆರೋಗ್ಯದ ರಕ್ಷಣೆಗಾಗಿ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಆರೋಗ್ಯ ಕ್ಷೇತ್ರದಲ್ಲಿ ಜನರು ದುಬಾರಿ ವೆಚ್ಚ ಮಾಡಬೇಕಾಗಿದೆ. ಬಡವರಿಗೆ ಕಷ್ಟ ಸಾಧ್ಯವಾಗುತ್ತಿದ್ದು ಈ ವರ್ಷ ನವಂಬರ್ 1 ರಿಂದ ಬಿಪಿಎಲ್ ಪಡಿತದಾರರಿಗೆ ಉಚಿತವಾಗಿ ಆರೋಗ್ಯ ಸೇವೆಯನ್ನು ನೀಡಲಾಗುತ್ತಿದೆ ಎಂದರು.
ಶಾಸಕ ಹಂಪಯ್ಯ ನಾಯಕ ಮಾತನಾಡಿ, ಕಲ್ಲೂರು ಗ್ರಾಮಕ್ಕೆ ಉತ್ತಮ ಆರೋಗ್ಯ ಸೌಲಭ್ಯ ಪಡೆಯಲು ಈ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ. ಈ ಹಿಂದೆ ಆಸ್ಪತ್ರೆಯಿದ್ದರೂ ಯಾರೂ ಅದರಲ್ಲಿ ಹೋಗಿ ಚಿಕಿತ್ಸೆ ಪಡೆಯುತ್ತಿರಲಿಲ್ಲ. ಹೊಸ ಕಟ್ಟಡ ಕಾಮಗಾರಿಗೆ ₹2 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಮಾತನಾಡಿ, ಈ ಆಸ್ಪತ್ರೆ ಬೇಡಿಕೆ ಬಹುದಿನಗಳದಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಆರೋಗ್ಯ ಸಚಿವರಿಂದ ಇದಕ್ಕೆ ಅನುಮೋದನೆ ಪಡೆದು ಈ ಕಾಮಗಾರಿ ಪ್ರಾರಂಭಿಸಲಾಗುತ್ತಿದೆ. ಜನರ ಸಹಕಾರ ಇದ್ದಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಗಂಗಣ್ಣ ಸಾಹುಕಾರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶರಣಮ್ಮ ಮುದಿಗೌಡ, ಎಪಿಎಂಸಿ ಸದಸ್ಯ ಬೀರಪ್ಪ ಕಡದಿನ್ನಿ, ಸಿರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಯಣ್ಣಗೌಡ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಂ.ಕೆ.ಎಸ್ ನಸೀರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರಯ್ಯ, ಕಲ್ಲೂರು ಗ್ರಾಮ ಪಂಚಾಯತಿ ಸದಸ್ಯ ಧನಂಜಯ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.