ADVERTISEMENT

ಸಿಂಧನೂರು ತಾಪಂ ಅಧ್ಯಕ್ಷರಾಗಿ ರಂಗಮ್ಮ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2012, 7:30 IST
Last Updated 15 ಫೆಬ್ರುವರಿ 2012, 7:30 IST

ಸಿಂಧನೂರು: ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಗುಡದೂರು ಕ್ಷೇತ್ರದ ರಂಗಮ್ಮ ಶಿವರೆಡ್ಡೆಪ್ಪ ಎಲೆಕೂಡ್ಲಗಿ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಬಾಲಮ್ಮ ನಾಗಪ್ಪ ಕಳೆದ ತಿಂಗಳು ರಾಜೀನಾಮೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ತೆರವುಗೊಂಡಿದ್ದ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾಧಿಕಾರಿ ನಿಗದಿಪಡಿಸಿದ ವೇಳಾಪಟ್ಟಿಗನುಗುಣವಾಗಿ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ರಂಗಮ್ಮ ಸಲ್ಲಿಸಿದ ನಾಮಪತ್ರಕ್ಕೆ ತಾಲ್ಲೂಕು ಪಂಚಾಯಿತಿ ಸದಸ್ಯರಾದ ವೆಂಕೋಬಣ್ಣ ಮತ್ತು ಕಲಾವತಿ ಸೂಚಕರಾಗಿದ್ದರು.

ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿರುವ ಅಧ್ಯಕ್ಷ ಸ್ಥಾನದ ಚುನಾವಣೆಗೆ ರಂಗಮ್ಮ ಶಿವರೆಡ್ಡೆಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾದರು. ಒಟ್ಟು 30 ಸದಸ್ಯರಲ್ಲಿ ಬಿಜೆಪಿಯ 12, ಜೆಡಿಎಸ್‌ನ ಇಬ್ಬರು ಹಾಗೂ ಕಾಂಗ್ರೆಸ್‌ನ 7 ಸದಸ್ಯರು ಸೇರಿದಂತೆ 21 ಸದಸ್ಯರು ಮತ ಚಲಾಯಿಸಿದರು.

ಲಿಂಗಸುಗೂರು ಉಪವಿಭಾಗದ ಸಹಾಯಕ ಆಯುಕ್ತ ಟಿ.ಯೋಗೀಶ ಚುನಾವಣಾಧಿಕಾರಿಯಾಗಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶರಣಬಸವರಾಜ ಕೆಸರಟ್ಟಿ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಅಭಿನಂದನೆ: ಅವಿರೋಧವಾಗಿ ಆಯ್ಕೆಯಾದ ರಂಗಮ್ಮ ಅವರನ್ನು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎನ್.ಶಿವನಗೌಡ ಗೊರೇಬಾಳ ಸೇರಿದಂತೆ ತಾಲ್ಲೂಕು ಪಂಚಾಯಿತಿ ಸದಸ್ಯರು ಅಭಿನಂದಿಸಿದರು. ಬೆಂಬಲಿಗರು ಮಹಾತ್ಮ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸುವ ಮೂಲಕ ಹರ್ಷ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.