ADVERTISEMENT

`ಹೆದ್ದಾರಿ ಒತ್ತುವರಿ ತೆರವು ಕ್ರಮಕ್ಕೆ ಸೂಚನೆ'

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 5:58 IST
Last Updated 5 ಸೆಪ್ಟೆಂಬರ್ 2013, 5:58 IST

ರಾಯಚೂರು: ತಿಂಥಿಣಿಯಿಂದ ಕಲ್ಮಲಾದವರೆಗಿನ ರಾಜ್ಯ ಹೆದ್ದಾರಿಯಲ್ಲಿ ಒತ್ತುವರಿಗೊಂಡ ಜಾಗ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೆಶಿಪ್ ಮುಖ್ಯಯೋಜನಾಧಿಕಾರಿ ಮಣಿವಣ್ಣನ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿ 193 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ತಿಂಥಿಣಿ ಬ್ರಿಜ್‌ದಿಂದ ಕಲ್ಮಾಲದವರೆಗೆ 73.90ಕಿಮೀಗಳ ರಸ್ತೆ ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಡ್ಡಿಯಾಗಿರುವ ರಸ್ತೆ ಒತ್ತುವರಿ ವಿಸ್ತರಣೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆ ಸೇತುವೆಗಳ ಬದಲಾವಣೆಗೆ ತುರ್ತು ಕ್ರಮವನ್ನು ಜಿಲ್ಲಾಡಳಿತ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಮೊದಲನೇ ಹಂತದ 32.450 ಕಿಮೀ ರಸ್ತೆ ಕಾಮಗಾರಿಯಲ್ಲಿ ಅಡ್ಡಿಯಾಗಿರುವ ಹಾಗೂ ಎರಡನೇ ಹಂತದ 41.350 ಕಿಮೀಗಳ ರಸ್ತೆ ನಿರ್ಮಾಣಕ್ಕೆ ಅಡ್ಡಿಯಾಗಿರುವ ರಸ್ತೆ ವಿಸ್ತರಣೆ ಕಾರ್ಯ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ದೇವದುರ್ಗ ತಾಲ್ಲೂಕಿನ ಗಬ್ಬೂರು, ಜಾಲಹಳ್ಳಿ ಗ್ರಾಮಗಳಲ್ಲಿ ರಸ್ತೆಗೆ ಅಡ್ಡಿಯಾಗಿರುವ ಅಂಗಡಿ ತೆರವುಗೊಳಿಸಿ ಕೆಶಿಪ್‌ಗೆ ನೀಡಬೇಕು. ಉಪವಿಭಾಗಾಧಿಕಾರಿಗಳು ಗಬ್ಬೂರು ಗ್ರಾಮದಲ್ಲಿನ ಒತ್ತುವರಿ ವಿಸ್ತರಣೆಗೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯ ಹೆದ್ದಾರಿ ನಿರ್ಮಾಣಕ್ಕಾಗಿ 700 ಎಕರೆ ಭೂಮಿ ಸ್ವಾಧೀನ ಪಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ದೇವದುರ್ಗ ಪಟ್ಟಣದಲ್ಲಿನ ಕುಡಿಯುವ ನೀರು ಪೂರೈಕೆ ಪೈಪ್‌ಗಳ ಹಳೆಯಾಗಿದ್ದು, ಅವುಗಳನ್ನು ಸೆಪ್ಟೆಂಬರ್ 20ರೊಳಗಾಗಿ ಬದಲಾವಣೆಯನ್ನು ಪುರಸಭೆ ಅಧಿಕಾರಿಗಳು ಮಾಡಬೇಕು. ಅಲ್ಲದೇ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡ ಅಂಗಡಿ ಮುಗ್ಗಟ್ಟುಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು.

ದೇವದುರ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿನ ನಾರಾಯಣಪುರ ಬಲದಂಡೆ ಕಾಲುವೆಗಳ ಬದಲಾವಣೆಗೆ ಪರ್ಯಾಯ ವ್ಯವಸ್ಥೆ ಮಾಡಲು ನೀರಾವರಿ ಇಲಾಖೆಯ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಜೆಸ್ಕಾಂನಿಂದ ವಿದ್ಯುತ್ ಕಂಬಗಳ ರಾಜ್ಯ ಹೆದ್ದಾರಿಯಲ್ಲಿದ್ದು, ಸೆಪ್ಟೆಂಬರ್ 25ರೊಳಗಾಗಿ ಸ್ಥಳಾಂತರಗೊಳಿಸಬೇಕು. ರೈತರು ಹಾಗೂ ಜನಪ್ರತಿನಿಧಿಗಳೊಂದಿಗೆ ಬಗ್ಗೆ ಚರ್ಚೆ ನಡೆಸಿದ ಸೆಪ್ಟೆಂಬರ್ 30ರೊಳಗಾಗಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಶಾಸಕ ಎ.ವೆಂಕಟೇಶ ನಾಯಕ, ಜಿಲ್ಲಾಧಿಕಾರಿ ಎಸ್.ಎನ್ ನಾಗರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ತಿಮ್ಮಪ್ಪ,ವಿಭಾಗಾಧಿಕಾರಿ ಎನ್.ಮಂಜುಶ್ರೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್ ನಾಗರಾಜ, ಸಾರಿಗೆ ಇಲಾಖೆಯ ಅಧಿಕಾರಿ ಸಿದ್ಧಲಿಂಗಯ್ಯ, ಲೋಕೋಪಯೋಗಿ ಇಲಾಖೆಯ  ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರಪ್ಪ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಸಿಕಂದಪಾಷಾ, ಕೆಶಿಪ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಮಾಲ ಹಾಗೂ ಇತರ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.