ರಾಯಚೂರು: ಪರಿಸರ ಸಂರಕ್ಷಣೆ ಕುರಿತು ಇನ್ನೂ ಹೆಚ್ಚಿನ ಜನಜಾಗೃತಿ ಆಗಬೇಕು. ಮಕ್ಕಳನ್ನು ಪರಿಸರ ಸಂರಕ್ಷಣೆ ಮಾಡುವ ಯೋಧರನ್ನಾಗಿ ಪಾಲಕರು ಮತ್ತು ಶಿಕ್ಷಕರು ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎನ್ ನಾಗರಾಜು ಹೇಳಿದರು.
ಇಲ್ಲಿನ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತೀಯ ಜ್ಞಾನ ವಿಜ್ಞಾನ ಸಮಿತಿ, ಸಂಡೂರು ಪರಿಸರ ಶಿಕ್ಷಣ ಮತ್ತು ಅಭಿವೃದ್ಧಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ‘ಪರಿಸರ ಮಿತ್ರ ಶಾಲೆ’ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕುಡಿಯುವ ನೀರಿಗಾಗಿ ಹೋರಾಟ ನಡೆಸಬೇಕಾದ ಸ್ಥಿತಿ ಈಗಲೇ ಕಾಣುತ್ತಿದ್ದೇವೆ. ನೈಸರ್ಗಿಕ ಸಂಪನ್ಮೂಲಗಳು ಮನುಷ್ಯನ ದುರಾಸೆಗೆ ಕಣ್ಮರೆಯಾಗುತ್ತಿವೆ. ಪರಿಸರ ಸಂರಕ್ಷಣೆ ಹೆಸರಲ್ಲಿ ಕಾರ್ಯಕ್ರಮ ನಡೆಸಿ ಸಸಿ ನೆಟ್ಟರೆ ಸಾಲದು. ಸಸಿಗಳನ್ನು ಜೋಪಾನ ಮಾಡಿ ಬೆಳೆಸಬೇಕು. ಪರಿಸರ ಮಾಲಿನ್ಯದ ಬಗ್ಗೆ ಧ್ವನಿ ಎತ್ತಬೇಕು ಎಂದರು.
ರಾಯಚೂರು ಜಿಲ್ಲೆಯಲ್ಲಿ ಸ್ವಚ್ಛತೆ, ಪರಿಸರ ಸಂರಕ್ಷಣೆ ಕಾಳಜಿ ತೀರಾ ಕಡಿಮೆ. ಕಲುಷಿತ ನೀರು ಸೇವನೆಯಿಂದ ಆಗುವ ಅಪಾಯಗಳ ಬಗ್ಗೆ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಪ್ರೊ. ಸಿ.ಡಿ ಪಾಟೀಲ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಾದ ದಿನೇಶ, ಆರ್. ಪದ್ಮನಾಭರಾವ್, ಡಿಡಿಪಿಐ ರಾಮಾಂಜನೇಯ, ಬಿಇಒ ಮಲ್ಲಿಕಾರ್ಜುನ, ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕ ಅಧ್ಯಕ್ಷ ಸೈಯದ್ ಹಫಿಜುಲ್ಲಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.