ರಾಯಚೂರು: ಕೇಂದ್ರದ ನೀತಿ ಆಯೋಗದ ಅಡಿಯಲ್ಲಿ ಹಾಗೂ ಭಾರತೀಯ ಜೈನ ಸಂಘದ ಸಹಭಾಗಿತ್ವದಲ್ಲಿ ಕೆರೆಗಳ ಪುನಶ್ಚೇತನಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರ ಡಾ.ಅವಿನಾಶ್ ಮೆನನ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಕೇಂದ್ರ ನೀತಿ ಆಯೋಗದಡಿಯಲ್ಲಿ ಸುಜಲಾಂ ಸುಫಲಾಂ ಘೋಷ ವಾಕ್ಯದಡಿ ಕೆರೆಗಳ ಪುನಶ್ಚೇತನ ಕಾರ್ಯಕ್ರಮ’ದ ಕುರಿತು ಶುಕ್ರವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರದ ನೀತಿ ಆಯೋಗದಡಿ ಒಟ್ಟು 10 ಜಿಲ್ಲೆಗಳು ಕೆರೆಗಳ ಪುನಶ್ಚೇತನಕ್ಕಾಗಿ ಆಯ್ಕೆಯಾಗಿದ್ದು, ಇದರಲ್ಲಿ ರಾಯಚೂರು ಜಿಲ್ಲೆಯೂ ಒಂದಾಗಿದೆ. ಜಿಲ್ಲೆಯಲ್ಲಿ ಒಟ್ಟು 186 ಕೆರೆಗಳನ್ನು ಪುನಶ್ಚೇತನಗೊಳಿಸುವ ಮಹತ್ತರವಾದ ನಿರ್ಧಾರವನ್ನು ಕೇಂದ್ರದ ನೀತಿ ಆಯೋಗ ಹೊಂದಿದೆ. ಇದಕ್ಕೆ ಭಾರತೀಯ ಜೈನ ಸಂಘಟನೆ ಸಹಕರಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಜಿಲ್ಲೆಯಲ್ಲಿನ ಕೆರೆಗಳಲ್ಲಿರುವ ಹೂಳೆತ್ತುವ ಹಾಗೂ ಕೆರೆ ಅಭಿವೃದ್ಧಿಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಮುಂದಿನ ನಾಲ್ಕು ತಿಂಗಳಿನಲ್ಲಿ ಜಿಲ್ಲೆಯ ಆಯ್ದ ಕೆರೆಗಳನ್ನು ಪುನಶ್ಚೇತನಗೊಳಿಸಲು ಸರ್ಕಾರದ ಇಲಾಖೆಗಳ ಅಧಿಕಾರಿಗಳಿಗೆ ಆಯಾ ಇಲಾಖೆಯಿಂದ ಜವಬ್ದಾರಿಯನ್ನು ನೀಡಲಾಗುವುದು. ತಮ್ಮ ಜವಬ್ದಾರಿಗಳನ್ನು ಎಚ್ಚರಿಕೆಯಿಂದ ನಿಭಾಯಿಸಬೇಕು ಎಂದು ಸೂಚಿಸಿದರು.
ಭಾರತೀಯ ಜೈನ ಸಂಘದ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ ಜಹಾನ್ ಖಾನಂ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಮಡೋಳಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೀರನಗೌಡ, ಜಿಲ್ಲಾ ಪಂಚಾಯತ್ ಸಿ.ಪಿ.ಯು ಟಿ.ರೋಣಿ, ಭಾರತೀಯ ಕಿಸಾನ್ ಸಂಘದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ವಿಶಾಲ್ ಫಾನ್ಸೆ ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.