ಮಸ್ಕಿ: ಧಾರ್ಮಿಕ ಕ್ಷೇತ್ರವಾಗಿರುವ ಮೆದಿಕಿನಾಳದ ಚನ್ನಮಲ್ಲ ಶಿವಯೋಗಿಗಳ ಮಠದ ಅಭಿವೃದ್ಧಿಗೆ ₹50 ಲಕ್ಷ ಅನುದಾನ ನೀಡಲಾಗಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ತಾಲ್ಲೂಕಿನ ಮೆದಿಕಿನಾಳ ಗ್ರಾಮದಲ್ಲಿ ಚನ್ನಮಲ್ಲಶಿವಯೋಗಿಗಳ 64ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಶಾಸಕನಾಗಿ ಮೂರು ವರ್ಷದ ಅವಧಿಯಲ್ಲಿ ಮೆದಿಕಿನಾಳ ಗ್ರಾಮಕ್ಕೆ ಹೆಚ್ಚಿನ ಅನುಧಾನ ನೀಡಿದ್ದೇನೆ. ಈ ಭಾಗದ ಬಹುದಿನದ ಬೇಡಿಕೆಯಾಗಿದ್ದ ಪದವಿಪೂರ್ವ ಕಾಲೇಜು ಕಟ್ಟಡಕ್ಕೆ ₹ 2 ಕೋಟಿ ಅನುದಾನ ನೀಡಿದ್ದು ಕಟ್ಟಡ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಆರಂಭವಾಗಲಿದೆ’ ಎಂದರು.
‘ಚನ್ನಮಲ್ಲಶಿವಯೋಗಿ ಮಠದಲ್ಲಿ ₹25 ಲಕ್ಷ ವೆಚ್ಚದಲ್ಲಿ ಯಾತ್ರಿ ನಿವಾಸ ಕಟ್ಟಡದ ಕಾಮಗಾರಿ ಆರಂಭವಾಗಿದೆ. ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿನ ಮಠ, ಮಂದಿರಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮಗಳ ಕುಡಿಯುವ ನೀರು, ರಸ್ತೆ, ಚರಂಡಿ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದು ಹೇಳಿದರು.
‘ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಒತ್ತು ನೀಡಲಾಗಿದ್ದು, ಶೀಘ್ರದಲ್ಲಿ ಅದು ಕಾರ್ಯಾರಂಭ ಆಗಲಿದೆ‘ ಎಂದರು.
ಡಾ. ಚನ್ನಮಲ್ಲ ಸ್ವಾಮೀಜಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.