ಸಿಂಧನೂರು: 371 (ಜೆ) ಕಲಂ ಅನುಷ್ಠಾನಗೊಂಡ ಮೇಲೆ ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಸಾಕಷ್ಟು ಅವಕಾಶಗಳು ಹೈದರಾಬಾದ್ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಲಭಿಸಿವೆ. ಈ ಭಾಗದ ಸರ್ವಾಂಗೀಣ ಅಭಿವೃದ್ಧಿ ಇದು ಪೂರಕ ಎಂದು ಎಂಎಸ್ಐಎಲ್ ಅಧ್ಯಕ್ಷರಾದ ಶಾಸಕ ಹಂಪನಗೌಡ ಬಾದರ್ಲಿ ಅಭಿಪ್ರಾಯಪಟ್ಟರು.
ಸ್ಥಳೀಯ ಮಾಂಟೆಸ್ಸರಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಸಂಜೆ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು, ಮೈಸೂರು ಭಾಗಕ್ಕೆ ಹೋಲಿಸಿದರೆ ಕಲಬುರ್ಗಿ ವಿಭಾಗ ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ 371 ಕಲಂ ಜಾರಿಯಾದ ನಂತರ ಈ ಭಾಗದ ಅನೇಕ ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದರು.
‘ಸಿಂಧನೂರಿನ 9 ವಿದ್ಯಾರ್ಥಿಗಳು ಕೆಎಎಸ್ ಪರೀಕ್ಷೆ ಉತ್ತೀರ್ಣರಾಗಿ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಪ್ರತಿ ವರ್ಷ 5800 ವಿದ್ಯಾರ್ಥಿಗಳು ಎಂಜನಿಯರಿಂಗ್, 4800 ವಿದ್ಯಾರ್ಥಿಗಳು ವೈದ್ಯಕೀಯ ವಿಭಾಗಕ್ಕೆ ಆಯ್ಕೆಯಾಗುತ್ತಿದ್ದು, ಇವರು ಸರ್ಕಾರಿ ಶುಲ್ಕ ಭರಿಸಿದರೆ ಸಾಕು’ ಎಂದು ಅವರು ತಿಳಿಸಿದರು.
ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ರಾಯಪ್ಪ, ನೇತ್ರತಜ್ಞ ಡಾ.ಚನ್ನನಗೌಡ ಪಾಟೀಲ ಮಾತನಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಹಾಗೂ ಅತ್ಯುನ್ನತ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ವೆಂಕನಗೌಡ ಆರ್.ಪಾಟೀಲ್ ಬಹುಮಾನ ವಿತರಿಸಿದರು. ಮುಖ್ಯಶಿಕ್ಷಕಿ ಕೆ.ವಿ.ಆರ್.ಜ್ಯೋತಿ, ನಿರ್ದೇಶಕ ಸತೀಶಕುಮಾರ ಇದ್ದರು. ಶಿಕ್ಷಕಿ ಸರಸ್ವತಿ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.