ರಾಯಚೂರು: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 30 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಪಿಐ(ಎಂಎಲ್) ರೆಡ್ಸ್ಟಾರ್ ಪಕ್ಷದ ಅಭ್ಯರ್ಥಿ ಸ್ಪರ್ಧಿಸಿದ್ದಾರೆ ಎಂದು ಪಕ್ಷದ ಮುಖಂಡ ಆರ್.ಮಾನಸಯ್ಯ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಅಧಿಕಾರ ಹಿಡಿದ ಪಕ್ಷಗಳಿಂದ ರಾಜ್ಯದಲ್ಲಿ ದುಸ್ಥಿತಿ ಬಂದಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಪ್ರಜಾಪ್ರಭುತ್ವದ ಅರ್ಥವನ್ನೇ ಕಳೆದುಕೊಂಡು ಮತ್ತೆ ರಾಜ್ಯದ ಅಧಿಕಾರಿ ಹಿಡಿಯಲು ಪ್ರಯತ್ನಿಸುತ್ತಿವೆ ಎಂದು ಟೀಕಿಸಿದರು.
ರಾಜ್ಯದಲ್ಲಿ 24 ನದಿಗಳಿದ್ದರೂ ರಾಜ್ಯದ ಜನತೆ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲೆಯಲ್ಲಿ 6 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಸ್ಥಾವರ ಇದ್ದರೂ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಪೂರೈಕೆ ಮಾಡಲು ಸಾಧ್ಯವಾಗಿಲ್ಲ ಎಂದು ಸಮಸ್ಯೆ ವಿವರಿಸಿದರು.
ರಾಜ್ಯದ ಜನತೆಗೆ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸದ ರಾಜಕೀಯ ಪಕ್ಷಗಳಿಗೆ ಪ್ರಜಾಪ್ರಭುತ್ವದ ಸಂರಕ್ಷಣೆ ಮಾಡಲು ಅಸಾಧ್ಯವಾಗಿದೆ ಎಂದು ಹೇಳಿದರು.
ರಾಜ್ಯಕ್ಕೆ ಬೇಕಾಗುವ 11 ಸಾವಿರ ಮೆಗಾವಾಟ್ಗಳಷ್ಟು ವಿದ್ಯುತ್ ಉತ್ಪಾದನೆಯ ಬಗ್ಗೆ ರಾಜ್ಯದಲ್ಲಿ ಆಡಳಿತ ನಡೆಸಿದ ರಾಜಕೀಯ ಪಕ್ಷಗಳು ಮಾಡುತ್ತಿಲ್ಲ. ರಾಜ್ಯ ವಿಧಾನ ಸಭೆಯಲ್ಲಿ ಆಡಳಿತ ಹೋರಾಟ ನಡೆಸುವ ಉದ್ದೇಶದಿಂದಲೇ ಸಿಪಿಐಎಂಎಲ್ ಪಕ್ಷವು ಸ್ಪರ್ಧಿಸುತ್ತಿರುವುದಾಗಿ ಹೇಳಿದರು. ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನೂರ ಜಹಾನ್ ಸ್ಪರ್ಧಿಸಿದ್ದಾರೆ ಎಂದು ಹೇಳಿದರು.
ಪಕ್ಷದ ಮುಖಂಡರಾದ ರಾಜಶೇಖರ, ಮಲ್ಲೇಶ, ನಲ್ಲಾರೆಡ್ಡಿ ಹಾಗೂ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.