ದೇವದುರ್ಗ: ಭೂ ಸುಧಾರಣೆ ಕಾಯ್ದೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತರಲು ಮುಂದಾಗಿರುವುದು ಅವೈಜ್ಞಾನಿಕವಾಗಿದ್ದು, ತಿದ್ದುಪಡಿಯಾದರೆ ಭೂ ಸುಧಾರಣೆ ಕಾಯ್ದೆಗೆ ಅಸ್ತಿತ್ವವೇ ಇರುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕ ಆರೋಪಿಸಿದೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸಂಘಟನೆಯ ಮುಖಂಡರು ಶಾಸಕ ಕೆ. ಶಿವನಗೌಡ ನಾಯಕ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.
‘ಉಳ್ಳವವನೇ ಭೂಮಿ ಒಡೆಯ‘ ಎಂಬ ಹಿಂದಿನ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಉಳ್ಳವರು ಮಾತ್ರ ಭೂಮಿಯ ಒಡೆಯನ್ನಾಗಿ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಸರಿಯಲ್ಲ. ಕಾಯ್ದೆಯನ್ನು ತಿದ್ದುಪಡಿ ಮಾಡಿದ್ದಲ್ಲಿ ರಾಜ್ಯದೆಲ್ಲೆಡೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಸಣ್ಣ ರೈತರ ಸಂಖ್ಯೆಯೇ ಹೆಚ್ಚಾಗಿ ಇದ್ದು, ಕಾಯ್ದೆ ಜಾರಿಗೆ ಬಂದರೆ ಅಂಥ ರೈತರ ಬದುಕು ಬೀದಿಗೆ ಬರುತ್ತದೆ. ಜೊತೆಗೆ ಗುಳೆ ಹೋಗುವ ಸ್ಥಿತಿ ಬರುತ್ತದೆ. ಆಹಾರ ಭದ್ರತೆಯ ಹಕ್ಕು ನಾಶವಾಗುತ್ತದೆ. ಬಂಡವಾಳಶಾಹಿಗಳ ಹಿಡಿತದಲ್ಲಿ ರೈತರು ಗುಲಾಮರಾಗಿ ಬಾಳಬೇಕಾಗುತ್ತದೆ ಎಂದು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.
ತಾಲ್ಲೂಕು ಘಟಕದ ಅಧ್ಯಕ್ಷ ಬೂದಯ್ಯಸ್ವಾಮಿ ಗಬ್ಬೂರು, ಪ್ರಭಾಕರ ಪಾಟೀಲ ಇಂಗಳದಾಳ, ಮಲ್ಲಪ್ಪಗೌಡ, ರಮೇಶ ಸುಂಕೇಶ್ವರಹಾಳ, ಶಿವು ಯಾದವ್, ಬಸವರಾಜ ಗಬ್ಬೂರು ಹಾಗೂ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.