ADVERTISEMENT

ರಾಯಚೂರು: ಮದ್ಯ ನಿಷೇಧಕ್ಕೆ ಆಗ್ರಹ, ಮುಂದುವರೆದ ಅಹೋರಾತ್ರಿ ಧರಣಿ

ಹೊಸ ಮದ್ಯದಂಗಡಿ ತೆರೆಯುವ ನಿರ್ಧಾರ ಕೈಬಿಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2023, 15:43 IST
Last Updated 2 ಅಕ್ಟೋಬರ್ 2023, 15:43 IST
ರಾಯಚೂರಿನ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣ ಬಳಿ ಧರಣಿನಿರತ ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರಿಗೆ ಮನವಿ ಸಲ್ಲಿಸಿದರು
ರಾಯಚೂರಿನ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣ ಬಳಿ ಧರಣಿನಿರತ ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರಿಗೆ ಮನವಿ ಸಲ್ಲಿಸಿದರು   

ರಾಯಚೂರು: ರಾಜ್ಯದಲ್ಲಿ ಹೊಸದಾಗಿ 1000 ಮದ್ಯದ ಅಂಗಡಿಗಳನ್ನು ತೆರೆಯಲು ಹೊರಟಿರುವ ಕಾಂಗ್ರೆಸ್‌ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಮದ್ಯ ನಿಷೇಧ ಕರ್ನಾಟಕ ಆಂದೋಲನಾ ಸಂಘಟನೆಯ ಪದಾಧಿಕಾರಿಗಳು ನಡೆಸುತ್ತಿರುವ ಆಹೋರಾತ್ರಿ ಧರಣಿ ಸೋಮವಾರವೂ ಮುಂದುವರೆದಿದ್ದು, ಎರಡನೇ ದಿನಕ್ಕೆ ಕಾಲಿಟ್ಟಿತು.

 ಜಿಲ್ಲಾ ಕ್ರೀಡಾಂಗಣ ಬಳಿಯ ಗಾಂಧಿ ಪುತ್ಥಳಿ ಎದರು ಧರಣಿ ಮುಂದುವರೆಸಿದ ಸಂಘಟನೆಯ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ದಂಧೆಗೆ ಕಡಿವಾಣ ಹಾಕಬೇಕು. ರಾಜ್ಯ ಸರ್ಕಾರ 1000 ಹೊಸ ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಲು ಮುಂದಾಗಿದೆ. ಜತೆಗೆ 3000 ಜನಸಂಖ್ಯೆಯುಳ್ಳ ಪ್ರದೇಶಕ್ಕೆ ಮದ್ಯದ ಅಂಗಡಿಗಳನ್ನು ತೆರೆಯಲು ತೀರ್ಮಾನಿಸಿರುವುದು ಸರಿಯಲ್ಲ. ಸರ್ಕಾರ ತನ್ನ ಖಜಾನೆ ತುಂಬಿಸಿಕೊಳ್ಳಲು ಮದ್ಯದ ಮೇಲೆ ಅವಲಂಬನೆಯಾಗಿರುವುದು ಖಂಡನಾರ್ಹ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲೆಯಲ್ಲಿನ ಅಕ್ರಮ ಮದ್ಯ ಮಾರಾಟದ ಬಗ್ಗೆ ಜಿಲ್ಲಾಡಳಿತ ಹಾಗೂ ಅಬಕಾರಿ ಇಲಾಖೆಗೆ ದಾಖಲೆ ಸಮೇತ ಮಾಹಿತಿ ನೀಡಿದರೂ ಮದ್ಯ ಮಾರಾಟವನ್ನು ನಿಯಂತ್ರಿಸಿಲ್ಲ ಎಂದು ದೂರಿದರು. 

ಈ ವೇಳೆ ಸಂಘಟನೆಯ ಮುಖಂಡ ವಿದ್ಯಾಪಾಟೀಲ, ವಿರುಪಮ್ಮ, ಮಾರೆಮ್ಮ, ರೇಣುಕಾ, ಮರಿಯಮ್ಮ, ಡಾ.ಶಾರದಾ ಹುಲಿನಾಯಕ, ಎಂ.ಆರ್‌.ಭೇರಿ, ಗುರುರಾಜ, ಬಸವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.