
ರಾಯಚೂರು: ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಆಲ್ ಇಂಡಿಯಾ ಡೆಮೊಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ನ (ಎಐಡಿಎಸ್ಒ) ಜಿಲ್ಲಾ ಘಟಕದಿಂದ ಭಾನುವಾರ ನಗರದ ಅಂಬೇಡ್ಕರ್ ವೃತ್ತದ ಎದರು ಪ್ರತಿಭಟನಾ ಸಮಾವೇಶ ನಡೆಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎಐಡಿಎಸ್ಒ ರಾಜ್ಯ ಘಟಕದ ಕಾರ್ಯದರ್ಶಿ ಅಜಯ ಕಾಮತ್ ಮಾತನಾಡಿ, ‘ಸರ್ಕಾರಿ ಶಾಲೆಗಳನ್ನು ಮುಚ್ಚುವುದಕ್ಕಾಗಿಯೇ ಸರ್ಕಾರ ಅಧಿಕೃತ ಸುತ್ತೋಲೆಗಳನ್ನು ಹೊರಡಿಸುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಾದ ಕೆಕೆಆರ್ಡಿಬಿ ನಿಧಿಯನ್ನು ಶಾಲೆ ಮುಚ್ಚಲು ಬಳಸುತ್ತಿರುವುದು ಖಂಡನೀಯ’ ಎಂದು ಆಕ್ರೋಶ ಹೊರಹಾಕಿದರು.
ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ ಎಂ. ಆರ್. ಬೇರಿ ಮಾತನಾಡಿ, ‘ಬಡವರ ಮಕ್ಕಳಿಂದ ಶಿಕ್ಷಣವನ್ನು ಕಸಿದುಕೊಂಡು, ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಸರ್ಕಾರದ ಈ ನೀತಿಯನ್ನು ಕೂಡಲೇ ಕೈಬಿಡಬೇಕು’ ಎಂದು ಆಗ್ರಹಿಸಿದರು.
ನಿವೃತ್ತ ಪ್ರಾಂಶುಪಾಲ ಬೂದೆಪ್ಪ, ಕಲ್ಯಾಣ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗನಾಥ, ಎಐಯುಟಿಯುಸಿ ರಾಜ್ಯ ಘಟಕದ ಉಪಾಧ್ಯಕ್ಷ ವೀರೇಶ ಎನ್. ಎಸ್., ಗ್ರಾಮ ಪಂಚಾಯಿತಿ ಸದಸ್ಯ ವೀರೇಶ ಯಾದವ ಮಾತನಾಡಿದರು.
ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಬಸವರಾಜ, ಪ್ರಮುಖರಾದ ಕಲ್ಯಾಣ ಕುಮಾರ, ನಾಗನಗೌಡ, ಜಗದೀಶ, ರಫೀಕ್, ತಿಮ್ಮಪ್ಪ, ಮಂಜುನಾಥ ಗುತ್ತೇದಾರ, ಬಶೀರ್ ಅಹ್ಮದ್ ಹೊಸಮನಿ, ನರಸಪ್ಪ, ಆಂಜನೇಯ, ಮಹೇಶ, ಚನ್ನಬಸವ ಜಾನೇಕಲ್, ಹಯ್ಯಾಳಪ್ಪ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.