ADVERTISEMENT

ನರೇಗಾ ಕಾರ್ಮಿಕರಿಗೆ ಕೂಲಿ ಪಾವತಿಸದ ಆರೋಪ: ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 13:53 IST
Last Updated 7 ಜೂನ್ 2025, 13:53 IST
ಮಾನ್ವಿ ತಾಲ್ಲೂಕಿನ ಸುಂಕೇಶ್ವರ ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿರುವ ಗ್ರಾಮಸ್ಥರು
ಮಾನ್ವಿ ತಾಲ್ಲೂಕಿನ ಸುಂಕೇಶ್ವರ ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿರುವ ಗ್ರಾಮಸ್ಥರು   

ಮಾನ್ವಿ: ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೂಲಿಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿದ ಘಟನೆ ತಾಲ್ಲೂಕಿನ ಸುಂಕೇಶ್ವರ ಗ್ರಾಮದಲ್ಲಿ ಶನಿವಾರ ಜರುಗಿದೆ.

ಮೇ ತಿಂಗಳಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆ ಅಡಿಯಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿತ್ತು. ಆ ಕಾಮಗಾರಿಗೆ ಕೆಲಸ ಮಾಡಿದ್ದ ಕಾರ್ಮಿಕರಿಗೆ ಕೂಲಿ ಹಣ ಪಾವತಿಸಲು ಅಧಿಕಾರಿಗಳು‌ ನಿರಾಕರಿಸಿರುವುದು ಘಟನೆಗೆ ಕಾರಣ ಎನ್ನಲಾಗಿದೆ.

ಶನಿವಾರ ಮತ್ತೆ ಅದೇ ನಾಲಾ ಹೂಳೆತ್ತುವ ಕಾಮಗಾರಿಗೆ ಕೆಲಸ ಮಾಡಲು ಬರುವಂತೆ ಅಧಿಕಾರಿಗಳು ಕಾರ್ಮಿಕರಿಗೆ ಹೇಳಿದ್ದರು. ಆದರೆ, ಕಾಮಗಾರಿ ಸ್ಥಳದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಮತ್ತಿತರ ಸಿಬ್ಬಂದಿ ಇರಲಿಲ್ಲ.

ADVERTISEMENT

ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿಗಾಗಿ ಮೂರ್ನಾಲ್ಕು ತಾಸು ಕಾದು ಕುಳಿತ ಕಾರ್ಮಿಕರು ಅಸಮಾಧಾನಗೊಂಡಿದ್ದಾರೆ. ನಂತರ ಗ್ರಾಮ ಪಂಚಾಯಿತಿ ಕಚೇರಿಗೆ ಬಂದು ಕೆಲಹೊತ್ತು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಯಾವುದೇ ಅಧಿಕಾರಿ ಬಾರದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

‘ಈ ಹಿಂದೆ ಮಾಡಿದ್ದ ಕೆಲಸಕ್ಕೆ ಕಾರ್ಮಿಕರಿಗೆ ಕೂಲಿ ಹಣ ನೀಡಿಲ್ಲ’ ಎಂದು ಗ್ರಾಮಸ್ಥರು ತಿಳಿಸಿದರು.

ಘಟನೆ ಕುರಿತು ಪ್ರತಿಕ್ರಿಯಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗಭೂಷಣ ಕಾಂಬ್ಳೆ,‘ ವೈಯಕ್ತಿಕ ಕೆಲಸದ ಕಾರಣಕ್ಕೆ ನಾನು ಬೇರೆ ಊರಿಗೆ ಬಂದಿರುವೆ. ನೈಜ ಕೂಲಿಕಾರ್ಮಿಕರಿಗೆ ಮಾತ್ರ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮತ್ತು ಕೂಲಿ ಹಣ ಪಾವತಿಸಲಾಗುವುದು ಎಂದು ತಿಳಿಸಲಾಗಿತ್ತು. ಕೂಲಿಕಾರ್ಮಿಕರ ಹೆಸರಿನಲ್ಲಿ ಬೇರೆಯವರಿಗೆ ಹಣ ಪಾವತಿಸಲು ನಿರಾಕರಿಸಿದ ಕಾರಣ ಘಟನೆ ನಡೆದಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.