ರಾಯಚೂರು: ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮುಕ್ಕುಂದಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಗೂ ಪಿಡಿಓ ಅವರು ವಿವಿಧ ಯೋಜನೆಯಡಿ ಬಿಡುಗಡೆಯಾದ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಂಗಾಪುರ ಗ್ರಾಮಸ್ಥರು ಆರೋಪಿಸಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಸಿಂಗಾಪುರ ಗ್ರಾಮದ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಿಂದ ಬಿಡುಗಡೆಯಾದ ಅನುದಾನವನ್ನು ನೀಡದೇ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿಯ ಸ್ಥಾನಿಕ ಅಧಿಕಾರಿಗೆ ದೂರು ಸಲ್ಲಿಸಿದರು.
ಅವ್ಯವಹಾರದ ಬಗ್ಗೆ ನೇಕ ಬಾರಿ ದೂರು ಸಲ್ಲಿಸಿದರೂ ಇದುವರೆಗೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕಾನೂನು ಬಾಹಿರವಾಗಿ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿ ರೂಪಿಸಿರುವ ಕ್ರಿಯಾ ಯೋಜನೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಅಧ್ಯಕ್ಷೆ ಅವರ ಪತಿ ರಮೇಶ ಅವರು ಗ್ರಾಮ ಪಂಚಾಯಿತಿಯ ಪ್ರತಿಯೊಂದು ಕಾರ್ಯದಲ್ಲಿಯೂ ಹಸ್ತಕ್ಷೇಪ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಕುಂತಲಾ ರಮೇಶ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪಿಡಿಒ ವನಜಾ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.
ಸಿಂಗಾಪುರ ಗ್ರಾಮ ಪಂಚಾಯಿತಿ ಸದಸ್ಯರಾದ ತಿಮ್ಮಣ್ಣ ಕೆಂಗಲ್, ಮಲ್ಲಯ್ಯ ಕಂಪ್ಲಿ, ಬಸವರಾಜ, ರಮೇಶಪ್ಪ ಸುಣಗಾರ, ಹುಸೇನಬಿ, ಪಾರ್ವತಿ ಅಂಗಡಿ, ರಜಿಯಾ ಬೇಗಂ, ಗ್ರಾಮಸ್ಥರಾದ ರಮೇಶ ಭೋವಿ, ಮಾರೆಪ್ಪ, ಶಂಕರಪ್ಪ, ನನ್ನೆಸಾಬ್, ಮೂಕಣ್ಣ, ಫಕೀರಪ್ಪ, ಯಮನೂರಪ್ಪ, ಪಂಪಾಪತಿ,ಸಿದ್ಧಯ್ಯ,ಮಾರೆಮ್ಮ, ಈರಮ್ಮ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.