ಸಿಂಧನೂರು: ‘ಕನ್ನಡ ಸಾಹಿತ್ಯ ಪರಿಷತ್ ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆ ಮೇ 9 ರಂದು ನಡೆಯಲಿದ್ದು, ನನಗೆ ಮತ ನೀಡಿ ಗೆಲ್ಲಿಸುವ ಮೂಲಕ ಸಾಹಿತ್ಯ ಪರಿಷತ್ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು‘ ಎಂದು ಜಿಲ್ಲಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಇಟಗಿ ಭೀಮನಗೌಡ ಮನವಿ ಮಾಡಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕನ್ನಡ ಸಾಹಿತ್ಯ, ಸಂಸ್ಕೃತಿಯ ಬಗೆಗೆ ಅಪಾರವಾದ ಆಸಕ್ತಿ, ಪ್ರೀತಿಯನ್ನು ಹೊಂದಿ ಕನ್ನಡ ನಾಡು, ನುಡಿ, ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಯಲ್ಲಿ ಕಳೆದ ನಲವತ್ತು ವರ್ಷಗಳಿಂದ ನಿರಂತರವಾಗಿ ನನ್ನನ್ನು ತೊಡಗಿಸಿಕೊಂಡಿದ್ದೇನೆ. ರಾಯಚೂರಿನಲ್ಲಿ ನಡೆದ 2ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಿಂದ ಇಲ್ಲಿಯವರೆಗೆ ವಿವಿಧ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದೇನೆ. ಈಗ ಜಿಲ್ಲೆಯ ಸಾಹಿತಿಗಳು ಹಾಗೂ ಗೆಳೆಯರ ಒತ್ತಾಸೆಯ ಮೇರೆಗೆ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ‘ ಎಂದರು.
‘ನಾನು ಜಿಲ್ಲಾ ಘಟಕದ ಅಧ್ಯಕ್ಷನಾಗಿ ಆಯ್ಕೆಯಾದರೆ ತಾಲ್ಲೂಕು, ಜಿಲ್ಲಾ ಹಾಗೂ ಮಹಿಳಾ ಸಮ್ಮೇಳನ ಆಯೋಜಿಸಲಾಗುವುದು. ಎಲ್ಲ ತಾಲ್ಲೂಕುಗಳಲ್ಲಿ ಯುವ ಬರಹಗಾರರಿಗೆ ವೇದಿಕೆ ಕಲ್ಪಿಸಲಾಗುವುದು. ಕಮ್ಮಟಗಳನ್ನು ನಡೆಸಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಕ್ರಮ ವಿಸ್ತರಿಸಲಾಗುವುದು. ವಿವಿಧ ಪ್ರಕಾರದ ಪ್ರಾತಿನಿಧಿಕ ಕೃತಿಗಳನ್ನು ಪ್ರಕಟಿಸಲಾಗುವುದು. ಸಂಗೀತ, ಚಿತ್ರಕಲೆ, ರಂಗಭೂಮಿ, ಜಾನಪದ, ಶರಣ ಸಾಹಿತ್ಯ, ದಾಸಸಾಹಿತ್ಯ, ತತ್ವಪದ ಅಲ್ಲದೆ ಪ್ರಸ್ತುತ ತಲ್ಲಣಗಳ ಕುರಿತು ವಿಚಾರ ಸಂಕೀರಣ ಆಯೋಜಿಸಿ, ಕಾಲೇಜು ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಮೂಡಿಸಲಾಗುವುದು’ ಎಂದು ತಿಳಿಸಿದರು.
ನಾಗರತ್ನಮ್ಮ ಬೆಟ್ಟದೂರು ಮಾತನಾಡಿ, ‘ಭೀಮನಗೌಡ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ, ಕಾರ್ಯಕಾರಿ ಸಮಿತಿಯಲ್ಲಿ ಯುವಕರಿಗೆ ಆದ್ಯತೆ ನೀಡಲಿದ್ದಾರೆ‘ ಎಂದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷೆ ಸರಸ್ವತಿ ಪಾಟೀಲ್, ಜಿಲ್ಲಾ ಪ್ರತಿನಿಧಿ ಅಮರೇಶಪ್ಪ ಮೈಲಾರ ಭೀಮನಗೌಡ ಇಟಗಿ ಅವರನ್ನು ಬೆಂಬಲಿಸುವಂತೆ ಕೋರಿದರು. ಸದಸ್ಯರಾದ ಜಿ.ತಿಪ್ಪಣ್ಣ, ಗಂಗನಗೌಡ ಪೊ.ಪಾ, ವಿಠಲ್ರಾವ್, ಬಸವರಾಜ ಬಳಿಗಾರ, ನಾಗರೆಡ್ಡಿ, ವೀರೇಶ ಯರದಿಹಾಳ, ಚಿನ್ನಪ್ಪ ಸಾಹುಕಾರ, ಲಿಂಗಮ್ಮ, ಶಿವರಾಜ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.