ADVERTISEMENT

ಸಿಂಧನೂರು: ಅಂಬಾದೇವಿಯ ರಥೋತ್ಸವ, ಜಂಬೂ ಸವಾರಿ

ಪುಷ್ಪನಮನ ಸಲ್ಲಿಸಿ ಚಾಲನೆ ನೀಡಿದ ಸಿಎಂ ಸಿದ್ಧರಾಮಯ್ಯ, ನಾಲ್ವರು ಸಚಿವರು ಸೇರಿ ಹಲವು ಗಣ್ಯರು ಭಾಗಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 6:20 IST
Last Updated 4 ಜನವರಿ 2026, 6:20 IST
ಸಿಂಧನೂರು ತಾಲ್ಲೂಕಿನ ಅಂಬಾಮಠದ ಅಂಬಾದೇವಿ ದೇವಸ್ಥಾನದ ರಥೋತ್ಸವ ಶನಿವಾರ ಸಂಜೆ ಅದ್ದೂರಿಯಾಗಿ ಜರುಗಿತು
ಸಿಂಧನೂರು ತಾಲ್ಲೂಕಿನ ಅಂಬಾಮಠದ ಅಂಬಾದೇವಿ ದೇವಸ್ಥಾನದ ರಥೋತ್ಸವ ಶನಿವಾರ ಸಂಜೆ ಅದ್ದೂರಿಯಾಗಿ ಜರುಗಿತು   

ಸಿಂಧನೂರು: ದೇಶದ ಎರಡನೇ ಶಕ್ತಿಪೀಠವಾಗಿರುವ ಸಿಂಧನೂರು ತಾಲ್ಲೂಕಿನ ಸೋಮಲಾಪುರ ಸಮೀಪದ ಅಂಬಾಮಠದ ಸಿದ್ಧಪರ್ವತವಾಸಿ ಅಂಬಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದ ನಿಮಿತ್ತ ಬನದ ಹುಣ್ಣಿಮೆಯ ದಿನವಾದ ಶನಿವಾರ ಸಂಜೆ ಜನಸಾಗರದ ಮಧ್ಯೆ ವೈಭವಪೂರಿತವಾಗಿ ಮಹಾರಥೋತ್ಸವ ಜರುಗಿತು.

ಹೊಸದಾಗಿ ಶಿಲಾಮಂಟಪ ದೇವಸ್ಥಾನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿರುವುದರಿಂದ ದೇವಸ್ಥಾನ ಮುಂಭಾಗದಲ್ಲಿ ಚಿಕ್ಕದಾಗಿ ಮಂಟಪ ನಿರ್ಮಿಸಿ ಅದರಲ್ಲಿ ಶಾಸ್ತ್ರೋಕ್ತವಾಗಿ ಅಂಬಾದೇವಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಜಾತ್ರೆ ಅಂಗವಾಗಿ ಪ್ರಧಾನ ಅರ್ಚಕ ಗುರುದತ್ತ, ಅರ್ಚಕರಾದ ಅಮರೇಶ ಭಟ್ ಹಾಗೂ ಬ್ರಹ್ಮಾನಂದ ಭಟ್ ನೇತೃತ್ವದಲ್ಲಿ ಶನಿವಾರ ಬೆಳಗಿನ ಜಾವ ಬ್ರಾಹ್ಮೀ ಮೂಹರ್ತದಲ್ಲಿ ದೇವಿಯ ಮೂರ್ತಿಗೆ ಕುಂಕುಮಾರ್ಚನೆ, ಬಿಲ್ವಾರ್ಚನೆ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.

ನಂತರ ಶಾಸಕ ಹಂಪನಗೌಡ ಬಾದರ್ಲಿ, ತಹಶೀಲ್ದಾರ್ ಅರುಣ್ ದೇಸಾಯಿ, ದೇವಸ್ಥಾನ ಸಮಿತಿಯ ನೂತನ ಅಧ್ಯಕ್ಷ ರಂಗನಗೌಡ ಗೊರೇಬಾಳ ಹಾಗೂ ಸದಸ್ಯರು ಪಲ್ಲಕ್ಕಿ ಉತ್ಸವ ನಡೆಸಿ ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಮತ್ತಿತರ ರಾಜ್ಯಗಳಿಂದ ಬಂದಿದ್ದ ಲಕ್ಷಾಂತರ ಸಂಖ್ಯೆಯ ಭಕ್ತರು ಸರದಿ ಸಾಲಿನಲ್ಲಿ ನಿಂತು ಬಗಳಾಮುಖಿ ದೇವಿಯ ದರ್ಶನ ಪಡೆದು ಪ್ರಾರ್ಥಿಸಿದರು.

ADVERTISEMENT

ಈ ಬಾರಿ ಹೊರಭಾಗದಲ್ಲಿ ಚಿಕ್ಕ ಮಂಟಪ ನಿರ್ಮಿಸಿ ದೇವಿ ಮೂರ್ತಿಯ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದರಿಂದ ಭಕ್ತರ ಮಧ್ಯ ನೂಕುನುಗ್ಗಲು ಉಂಟಾಯಿತು.

ಸಂಜೆ 5 ಗಂಟೆಗೆ ದೇವಸ್ಥಾನದ ಅರ್ಚಕರು ಅಂಬಾದೇವಿ ಉತ್ಸವ ಮೂರ್ತಿಯೊಂದಿಗೆ ಬಂದು ಮಹಾರಥದ ಕಳಸಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ನಂತರ ಆನೆಯ ಮೇಲೆ ಅಂಬಾರಿಯಲ್ಲಿ ಅಂಬಾದೇವಿಯ ಮೂರ್ತಿ ಹೊತ್ತುಕೊಂಡಿದ್ದ ಜಂಬೂ ಸವಾರಿ ಮತ್ತು ಮಹಾರಥೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಉತ್ಸವ ಮೂರ್ತಿಯನ್ನು ಹೊತ್ತಿದ್ದ ರಥೋತ್ಸವ ಪಾದಕಟ್ಟೆಯವರೆಗೆ ಸಾಗಿತು. ಲಕ್ಷಾಂತರ ಭಕ್ತರು ಅಂಬಾದೇವಿಗೆ ಜಯಘೋಷ ಹಾಕುತ್ತಾ ಹೂ, ಉತ್ತತ್ತಿ, ಬಾಳೆಹಣ್ಣು ಮತ್ತು ಭಂಡಾರವನ್ನು ರಥೋತ್ಸವಕ್ಕೆ ಎಸೆದು ಭಕ್ತಿ ಸಮರ್ಪಿಸಿದರು. ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ರಥೋತ್ಸವಕ್ಕೆ ಮೆರುಗು ತಂದವು.

ಸಚಿವರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳೆ, ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಿವರಾಜ ಎಸ್.ತಂಗಡಗಿ, ಕೊಪ್ಪಳ ಸಂಸದ ಕೆ.ರಾಜಶೇಖರ ಹಿಟ್ನಾಳ್, ಶಾಸಕ ಆರ್.ಬಸನಗೌಡ ತುರ್ವಿಹಾಳ, ಹಟ್ಟಿ ಚಿನ್ನದಗಣಿ ನಿಗಮ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ್, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣ್‍ಕುಮಾರ ಎಂ.ವೈ.ಪಾಟೀಲ್, ಸಿರಗುಪ್ಪ ಶಾಸಕ ಬಿ.ಎಂ.ನಾಗರಾಜ, ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ, ಎ.ವಸಂತಕುಮಾರ, ಪ್ರಾದೇಶಿಕ ಆಯುಕ್ತೆ ಜಹೀರಾ ನಸೀನ್, ಜಿಲ್ಲಾಧಿಕಾರಿ ನಿತೀಶ್.ಕೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಟಿಎಪಿಸಿಎಂಎಸ್ ಅಧ್ಯಕ್ಷ ಶರಣಪ್ಪ ರಡ್ಡೇರ್, ಅಂಬಾದೇವಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಂಗನಗೌಡ ಗೊರೇಬಾಳ, ಸೋಮಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಮ್ಮ ಹುಸೇನಪ್ಪ ಮನ್ನಾಪುರ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಅನಿಲ್‍ಕುಮಾರ ವೈ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ, ರೈಲ್ವೆ ಭೂಸ್ವಾಧೀನ ಅಧಿಕಾರಿ ಶೃತಿ, ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಅಂಬಾದೇವಿಯ ಮೂರ್ತಿಯನ್ನು ಹೊತ್ತುಕೊಂಡು ಜಂಬೂ ಸವಾರಿ ಅದ್ದೂರಿಯಾಗಿ ನಡೆಯಿತು