ರಾಯಚೂರು: ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಸಂದರ್ಭದಲ್ಲಿ ಕಷ್ಟಪಟ್ಟು ದುಡಿಯುತ್ತಿರುವ ಪೌರಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿರುವ ಸರ್ಕಾರ, ಅವರಿಗೆ ಆರು ತಿಂಗಳುಗಳಿಂದ ವೇತನ ನೀಡಿಲ್ಲ. ಸುರಕ್ಷತಾ ಸಾಧನಗಳನ್ನು ಕೊಟ್ಟಿಲ್ಲ. ಈ ನೀತಿಯನ್ನು ವಿರೋಧಿಸಿ ಏಪ್ರಿಲ್ 1 ರಿಂದ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಸ್.ಮಾರೆಪ್ಪ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿದಿನ ಬೆಳಿಗ್ಗೆ 5.30 ರಿಂದ ಕೆಲಸ ಆರಂಭಿಸುವ ಪೌರಕಾರ್ಮಿಕರಿಗೆ ನೀರಿನ ವ್ಯವಸ್ಥೆ, ಉಪಹಾರದ ವ್ಯವಸ್ಥೆ ಇರುವುದಿಲ್ಲ. ಎರಡು ವರ್ಷಗಳಿಂದಲೂ ಸುರಕ್ಷತಾ ಸಾಧನಗಳನ್ನು ಕೊಟ್ಟಿಲ್ಲ. ಕನಿಷ್ಠ ಪಕ್ಷ ಕೊರೊನಾ ಸೋಂಕಿನಿಂದ ಸುರಕ್ಷಿತವಾಗಿರಲು ಈಗ ಕೊಡಬೇಕಾಗಿತ್ತು. ಆದರೆ, ಜಿಲ್ಲಾಧಿಕಾರಿ ಮತ್ತು ನಗರಸಭೆ ಪೌರಾಯುಕ್ತರು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.
2017 ರ ಏಪ್ರಿಲ್ನಲ್ಲಿ 115 ಪೌರಕಾರ್ಮಿಕರನ್ನು ಕಾಯಂ ಮಾಡಿರುವ ಆದೇಶವನ್ನು ರದ್ದುಪಡಿಸಲು 2019ರ ಮಾರ್ಚ್ನಲ್ಲಿ ಸಚಿವರ ಆದೇಶ ನೀಡಿದ್ದರೂ ಪಾಲನೆ ಆಗುತ್ತಿಲ್ಲ. ಜಿಲ್ಲಾಡಳಿತ ಕ್ರಮ ಕೈಗೊಳ್ಳದಂತೆ ಶಾಸಕ ಡಾ.ಶಿವರಾಜ ಪಾಟೀಲ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಉರುಕುಂದಪ್ಪ, ಶ್ರೀನಿವಾಸ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.