ದೇವದುರ್ಗ (ರಾಯಚೂರು ಜಿಲ್ಲೆ): ದೇವದುರ್ಗ ತಾಲ್ಲೂಕಿನ ಅರಕೇರಾದಲ್ಲಿರುವ ಪರಿಶಿಷ್ಟ ಪಂಗಡ ಇಲಾಖೆಯ ಬಾಲಕಿಯರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಆಹಾರ ಸೇವಿಸಿ 70 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.
ಸೋಮವಾರ ರಾತ್ರಿ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರು ಅಲಸಂದಿ ಕಾಳು, ಚಪಾತಿ, ಅನ್ನ ಸಾಂಬಾರು ಊಟ ಮಾಡಿದ್ದರು. ರಾತ್ರಿಯೇ ಕೆಲ ವಿದ್ಯಾರ್ಥಿನಿಯರಿಗೆ ತಲೆ ನೋವು ಕಾಣಿಸಿಕೊಂಡಿದೆ. ಕೆಲವರು ತಲೆಸುತ್ತು ಬಂದು ವಾಂತಿ ಮಾಡಿಕೊಂಡಿದ್ದರು.
ವಿದ್ಯಾರ್ಥಿನಿಯರು ಹಾಸ್ಟೆಲ್ ಸಿಬ್ಬಂದಿಗೆ ತಿಳಿಸಿದಾಗ ಅವರು ಅತಿಯಾದ ಬಿಸಿಲಿನಿಂದ ತಲೆಸುತ್ತು ಬಂದಿರಬಹುದು ಹಾಸ್ಟೆಲ್ನಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು.
ಮಂಗಳವಾರ ಬೆಳಿಗ್ಗೆ 20 ಮಕ್ಕಳು ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡ ತಕ್ಷಣ ಅವರನ್ನು ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಮಧ್ಯಾಹ್ನದ ವೇಳೆಗೆ ಅಸ್ವಸ್ಥಗೊಂಡ ಮಕ್ಕಳ ಸಂಖ್ಯೆ 70ಕ್ಕೆ ಏರಿದೆ.
ಮಕ್ಕಳು ಅಸ್ವಸ್ಥಗೊಂಡ ಸುದ್ದಿ ತಿಳಿದು ಪಾಲಕರು ವಸತಿನಿಲಯಕ್ಕೆ ಬಂದು ಇಲಾಖೆಯ ಸಿಬ್ಬಂದಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಉಪ ವಿಭಾಗಾಧಿಕಾರಿ ಎಸ್.ಎಸ್ . ಸಂಪಗಾವಿ, ಡಿಎಚ್ಒ ಡಾ ಸುರೇಂದ್ರ ಬಾಬು, ಪರಿಶಿಷ್ಟ ಪಂಗಡ ಇಲಾಖೆಯ ಆಧಿಕಾರಿ ರಾಜೇಂದ್ರ ಜಲ್ದಾರ್, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಟಿಎಚ್ಒ ಡಾ. ಬನದೇಶ್ವರ, ನಾಡ ತಹಶೀಲ್ದಾರ್ ಮನೋಹರ ನಾಯಕ ಭೇಟಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.