ADVERTISEMENT

ಇಲಾಖೆಗಳ ಮಧ್ಯೆ ಸಮನ್ವಯತೆ ಅಗತ್ಯ: ನೂರ್‌ ಜಹಾರ್‌ ಖಾನಂ

ಜಿಲ್ಲಾ ಪಂಚಾಯಿತಿ ಸಿಇಒ ನೂರ್‌ ಜಹಾರ್‌ ಖಾನಂ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 17 ಮೇ 2022, 13:01 IST
Last Updated 17 ಮೇ 2022, 13:01 IST
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ‘ಮಹತ್ವಾಕಾಂಕ್ಷಿ ಜಿಲ್ಲೆಯ ಮುಂದಿನ ದೃಷ್ಟಿಕೋನ‘ ವಿಷಯ ಕುರಿತ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ್‌ ಜಹಾರ್‌ ಖಾನಂ ಉದ್ಘಾಟಿಸಿದರು. 
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ‘ಮಹತ್ವಾಕಾಂಕ್ಷಿ ಜಿಲ್ಲೆಯ ಮುಂದಿನ ದೃಷ್ಟಿಕೋನ‘ ವಿಷಯ ಕುರಿತ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ್‌ ಜಹಾರ್‌ ಖಾನಂ ಉದ್ಘಾಟಿಸಿದರು.    

ರಾಯಚೂರು: ನಿಗದಿತ ಅಭಿವೃದ್ಧಿ ಸಾಧಿಸುವುದಕ್ಕೆ ಇಲಾಖೆಗಳ ಮಧ್ಯೆ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವುದು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ್‌ ಜಹಾರ್‌ ಖಾನಂ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ಮಂಗಳವಾರ ಆಯೋಜಿಸಿದ್ದ ‘ಮಹತ್ವಾಕಾಂಕ್ಷಿ ಜಿಲ್ಲೆಯ ಮುಂದಿನ ದೃಷ್ಟಿಕೋನ‘ ವಿಷಯ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯಗಳಲ್ಲಿ ನಿರ್ದಿಷ್ಟ ಪ್ರಗತಿ ಸಾಧಿಸಬೇಕಿದೆ. ಇದಕ್ಕಾಗಿ ಕೇಂದ್ರದ ನೀತಿ ಆಯೋಗವು ಕೆಲವು ಮಾರ್ಗದರ್ಶಿ ಅಂಶಗಳನ್ನು ನೀಡಿದೆ. ಇಲಾಖೆಯ ಅಧಿಕಾರಿಗಳ ಮಧ್ಯೆ ಯಾವುದೇ ಕಾರಣಕ್ಕೂ ಗೊಂದಲ ಇರಬಾರದು. ಯೋಜನೆಗಳನ್ನು ಸಮರ್ಪಕವಾಗಿ ಅರ್ಥ ಮಾಡಿಕೊಂಡು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ADVERTISEMENT

ಪ್ರಗತಿ ಸಾಧಿಸುವ ವಿಷಯದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ದೇಶದಲ್ಲಿ 112 ಮಹತ್ವಾಕಾಂಕ್ಷಿ ಜಿ್ಲ್ಲೆಗಳನ್ನು ಆಯ್ಕೆ ಮಾಡಲಾಗಿದ್ದು, ಇವುಗಳಲ್ಲಿ ರಾಯಚೂರು ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ತರಲು ಅಧಿಕಾರಿಗಳು ಗಮನಹರಿಸಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್‌.ದುರುಗೇಶ ಮಾತನಾಡಿ, ಅಭಿವೃದ್ಧಿ ಸಾಧಿಸುವ ವಿಷಯ ಕುರಿತು ಕಾರ್ಯಾಗಾರದಲ್ಲಿ ಚಿಂತನ–ಮಂಥನ ಮಾಡಬೇಕು. ನೀತಿ ಆಯೋಗದ ನಿರ್ದೇಶನದಂತೆ ಪ್ರಗತಿ ಸಾಧಿಸುವುದಕ್ಕೆ ಅಧಿಕಾರಿಗಳು ಲಭ್ಯವಿರುವ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನೀತಿ ಆಯೋಗದ ಮೂವರು ಸಂಪನ್ಮೂಲ ವ್ಯಕ್ತಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಟಿ.ರೋಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.