ಮಸ್ಕಿ: ಕ್ಷೇತ್ರದ 231 ಮತಗಟ್ಟೆಗಳ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಚುನಾವಣೆ ಆಯೋಗ ಆರಂಭಿಸಿದ್ದು, ಕಾರ್ಯಕರ್ತರು ಪರಿಷ್ಕರಣೆ ವೇಳೆ ಜಾಗ್ರತರಾಗಿರಬೇಕು ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ಪಟ್ಟಣದ ಬಸವೇಶ್ವರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಬಿಎಲ್ಒಗಳು ಬಂದ ಸಂದರ್ಭದಲ್ಲಿ ತಮ್ಮ ಮತಗಟ್ಟೆಯ ಹೊಸ ಮತದಾರರನ್ನು ಸೇರ್ಪಡೆ ಮಾಡಬೇಕು. ತಿದ್ದುಪಡಿ ಹಾಗೂ ವರ್ಗಾವಣೆ ಬಗ್ಗೆಯೂ ನಿಗಾ ಇಟ್ಟು ಬಿಎಲ್ಒಗಳಿಗೆ ಸಹಕರಿಸಬೇಕು ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಬೂತ್ ಮಟ್ಟದ ಕಾರ್ಯಕರ್ತರ ಜವಾಬ್ದಾರಿ ಪ್ರಮುಖವಾದದ್ದು. ಪ್ರತಿ ಬೂತ್ನಲ್ಲಿ ಯಾರದ್ದಾದರೂ ಹೆಸರು ಬಿಟ್ಟು ಹೋಗಿದ್ದರೆ ಕೂಡಲೇ ಬಿಎಲ್ಒ ಅಥವಾ ತಾಲ್ಲೂಕು ಚುನಾವಣಾಧಿಕಾರಿ ಗಮನಕ್ಕೆ ತರಬೇಕು ಎಂದು ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಪುನಃ ಅಧಿಕಾರಕ್ಕೆ ತರಲು ಪಕ್ಷದ ಕಾರ್ಯಕರ್ತರು ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮತದಾರರಿಗೆ ತಿಳಿಸುವ ಮೂಲಕ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು ಎಂದರು.
ಪುರಸಭೆ, ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.