ಸಿಂಧನೂರು: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸೋಮವಾರ ನಗರದ ಮಿನಿ ವಿಧಾನಸೌಧ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ‘ಕನ್ಹಯ್ಯ ಲಾಲ್ ಅವರ ಹತ್ಯೆಯಂತೆ ಹಿಂದೂ ಧರ್ಮೀಯರ ಮೇಲೆ ಜಿಹಾದಿಗಳು ನಡೆಸುತ್ತಿರುವ ಕೃತ್ಯಗಳನ್ನು ಸಹಿಸಲು ಆಗುವುದಿವಿಲ್ಲ’ ಎಂದರು.
ದೇಶದಲ್ಲಿ ಕೋಮು ಗಲಭೆಗಳನ್ನು ಸೃಷ್ಟಿಸಿ, ಹಿಂದೂಗಳನ್ನು ಭಯಪಡಿಸುವ ತಂತ್ರ ಇದು. ಗುಪ್ತಚರ ಇಲಾಖೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಕನ್ಹಯ್ಯ ಲಾಲ್ ಕುಟುಂಬಸ್ಥರಿಗೆ ರಾಜಸ್ಥಾನ ಸರ್ಕಾರ ₹1 ಕೋಟಿ ಪರಿಹಾರ ನೀಡಬೇಕು. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.
ಉತ್ತರ ಕರ್ನಾಟಕ ಪ್ರಾಂತ್ಯ ಸಂಯೋಜಕ ಶ್ರೀಕಾಂತ ಹೊಸಕೆರೆ ಮಾತನಾಡಿ, ‘ಐಸಿಸ್, ಎಸ್ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸ ಬೇಕು. ತಾಲ್ಲೂಕಿನ ಸಿಂಗಾಪುರ ಸರ್ಕಾರಿ ಶಾಲೆಯ ಶಿಕ್ಷಕರಒಬ್ಬರ ಅಸಭ್ಯ ವರ್ತನೆ ವಿಡಿಯೊ ಬಹಿರಂಗವಾಗಿದೆ. ಅವರಿಗೂ ಕಠಿಣ ಶಿಕ್ಷೆ ಆಗಬೇಕು ಎಂದರು.
ಕರಿಬಸವನಗರದ ರಂಭಾಪುರಿ ಖಾಸಾ ಶಾಖಾ ಮಠದ ಸೋಮನಾಥ ಶಿವಾಚಾರ್ಯರು, ಜಿ.ಲಾ ಪಂ ಮಾಜಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಸದಸ್ಯರಾದ ಅಮರೇಗೌಡ ವಿರು ಪಾಪುರ, ಎನ್.ಶಿವನಗೌಡ ಗೊರೇಬಾಳ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದಾ, ನಗರ ಮಂಡಲ ಅಧ್ಯಕ್ಷ ನಿರುಪಾದೆಪ್ಪ ಜೋಳದರಾಶಿ, ಮುಖಂಡರಾದ ಸರ್ವೇಶ್ವರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.