ರಾಯಚೂರು: ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 4ರಲ್ಲಿ ಬಿಜೆಪಿ ಭಾರಿ ಪ್ರಮಾಣದಲ್ಲಿ ಗೆಲುವು ಸಾಧಿಸಿರುವುದಕ್ಕೆ ಹಿಂದುಳಿದ ವರ್ಗದವರು ಕಾರಣರಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಕ್ಷ್ಮಣ ಹೇಳಿದರು.
ಮಂತ್ರಾಲಯದ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಒಬಿಸಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಹಿಂದುಳಿದ ವರ್ಗಗಳ ಹಿತಕ್ಕಾಗಿ ಬಿಜೆಪಿ ಕೆಲಸ ಮಾಡುತ್ತಿದ್ದು, ಇದನ್ನು ಜನರು ಅರ್ಥ ಮಾಡಿಕೊಂಡು ಗೆಲ್ಲಿಸಿದ್ದಾರೆ. ಕರ್ನಾಟಕದಲ್ಲೂ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಕ್ರಿಯರಾಗಬೇಕು ಎಂದು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಏಪ್ರಿಲ್ 17 ರಂದು ಬಿಜೆಪಿ ಒಬಿಸಿ ಮೋರ್ಚಾ ಸಮಾವೇಶ ಆಯೋಜಿಸಲಾಗುತ್ತಿದ್ದು, ಅದನ್ನು ಯಶಸ್ವಿಗೊಳಿಸಬೇಕು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತದಲ್ಲಿ ಅಧಿಕಾರಕ್ಕೆ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.
ಬಿಜೆಪಿ ಒಬಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಪಾರ್ಥಸಾರಥಿ, ರಾಜ್ಯ ಘಟಕದ ಅಧ್ಯಕ್ಷ ನೆ.ಲ.ನರೇಂದ್ರಬಾಬು, ಮುಖಂಡರಾದ ಕೆ.ವಿರೂಪಾಕ್ಷಪ್ಪ ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.