
ರಾಯಚೂರು: ‘ಜಿಲ್ಲೆಯ ಚೀಕಲಪರ್ವಿ ಮತ್ತು ಚಿಕ್ಕ ಮಂಚಾಲಿ ಹತ್ತಿರ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಕಳೆದ ವರ್ಷ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಜೊತೆ ಚರ್ಚೆ ನಡೆದಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.
ಮಂತ್ರಾಲಯದಲ್ಲಿ ಬುಧವಾರ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಶಾಸಕ ಬಸನಗೌಡ ದದ್ದಲ್, ಸಂಸದ ಜಿ. ಕುಮಾರ ನಾಯಕ ಮತ್ತು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ಜೊತೆ ಚರ್ಚಿಸಿ ಅವರು ಮಾತನಾಡಿದರು.
ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಜನರಿಗೆ ಸಂಪರ್ಕ ವ್ಯವಸ್ಥೆ ಸುಧಾರಣೆ, ಕುಡಿಯುವ ನೀರು, ನೀರಾವರಿ ಸೌಲಭ್ಯಗಳಿಗಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಅಗತ್ಯವಿದೆ, ಎರಡು ರಾಜ್ಯಗಳ ಆಕ್ಷೇಪ ಕುರಿತು ಚರ್ಚೆ ನಡೆಸಲಾಗುತ್ತಿದೆ.
ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದಿಂದ ನದಿಗೆ ಹೊಂದಿಕೊಂಡ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ಸುಂಕೇಶ್ವರ ಬ್ರಿಡ್ಜ್ ಕಂ ಬ್ಯಾರೇಜ್ ಗೆ ನೀರಿನ ಮಟ್ಟ ಕಡಿಮೆಯಾಗಲಿದೆ ಎಂದು ಆಂಧ್ರಪ್ರದೇಶ ಸರ್ಕಾರ ಆಕ್ಷೇಪಣೆ ಸಲ್ಲಿಸಿದೆ. ಆದರೆ ಈ ಕಾಮಗಾರಿಯಿಂದ ಯಾವುದೇ ತೊಂದರೆಯಾಗದು ಎಂದು ಮನವರಿಕೆ ಮಾಡಿಕೊಡಲಾಗುವುದು ಎಂದರು.
ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹಾಗೂ ಶಾಸಕ ಬಸನಗೌಡ ದದ್ದಲ್ ಅವರು ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದ ಅಗತ್ಯ ಕುರಿತು ಉಪ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಶಾಸಕರಾದ ಜಿ.ಹಂಪಯ್ಯ ನಾಯಕ, ತುರುವಿಹಾಳ ಬಸನಗೌಡ, ಬಸನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯ ಎ. ವಸಂತ ಕುಮಾರ, ಮುಖ್ಯ ಎಂಜಿನಿಯರ್ ಲಕ್ಷ್ಮಣ ನಾಯಕ, ಅಧೀಕ್ಷಕ ಎಂಜಿನಿಯರ್ ಸತ್ಯನಾರಾಯಣ ಶೆಟ್ಟಿ, ಇಇ ಎಂ.ಎಸ್.ಗೋಡೆಕರ್ ಮತ್ತು ಶಾಂತರಾಜ್ ಮತ್ತಿತರರು ಉಪಸ್ಥಿತರಿದ್ದರು.
.
Highlights - ₹158 ಕೋಟಿ ವೆಚ್ಚದಲ್ಲಿ ಎರಡು ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ‘ಆಂಧ್ರ, ತೆಲಂಗಾಣ ಆಕ್ಷೇಪಕ್ಕೆ ಸೂಕ್ತ ಉತ್ತರ’
Cut-off box - ಏತನೀರಾವರಿ ಯೋಜನಾ ಸ್ಥಳಕ್ಕೆ ಭೇಟಿ ರಾಯಚೂರು: ತಾಲ್ಲೂಕಿನ ಗುಂಜಳ್ಳಿ ಗ್ರಾಮದ ಗುಂಜಳ್ಳಿ ಬಸಪ್ಪ ಕೆರೆ ಏತನೀರಾವರಿ ಯೋಜನಾ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಶಾಸಕರಾಸ ಬಸನಗೌಡ ದದ್ದಲ ಎ.ವಸಂತಕುಮಾರ ಮತ್ತಿತರರು ಬುಧವಾರ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ ‘ಗುಂಜಳ್ಳಿ ಬಸಪ್ಪ ಕೆರೆ ಏತನೀರಾವರಿ ಯೋಜನೆ ತುಂಗಭದ್ರಾ ನದಿಯಿಂದ ಗುಂಜಳ್ಳಿ ಕೆರೆ ಸೇರಿದಂತೆ ಸುತ್ತಮುತ್ತಲಿನ 9 ಕೆರೆಗಳಿಗೆ ನೀರು ತುಂಬಿಸುವ ₹146 ಕೋಟಿ ವೆಚ್ಚದ ಮಹತ್ವದ ಯೋಜನೆಯಾಗಿದೆ. ಅಗತ್ಯ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಗುಣಮಟ್ಟದೊಂದಿಗೆ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.