ರಾಯಚೂರು: ಮಕ್ಕಳ ರಕ್ಷಣೆ ಎಲ್ಲರ ಹೊಣೆಯಾಗಿದ್ದು ಅವರ ಸಂರಕ್ಷಣೆ ಹಾಗೂ ಭವಿಷ್ಯ ರೂಪಿಸಲು ಸಂಬಂಧಿಸಿದ ಎಲ್ಲ ಕ್ರಮಗಳನ್ನು ವಹಿಸುವುದು ಮುಖ್ಯವಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಜಯಲಕ್ಷ್ಮಿ ಹೇಳಿದರು.
ಕೃಷಿ ವಿಜ್ಞಾನ ಕೇಂದ್ರದಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಈಚೆಗೆ ಆಯೋಜಿಸಿದ್ದ ‘ಮಕ್ಕಳ ಸುರಕ್ಷತೆ ಮತ್ತು ಮಕ್ಕಳ ರಕ್ಷಣಾ ನೀತಿ’ ಕುರಿತ ತಾಲ್ಲೂಕುಮಟ್ಟದ ಒಂದು ದಿನದ ಕಾರ್ಯಗಾರದಲ್ಲಿ ಮಾತನಾಡಿದರು.
ಮಕ್ಕಳ ಸುರಕ್ಷತೆ ಮತ್ತು ರಕ್ಷಣೆ ಅತೀ ಮುಖ್ಯವಾಗಿದೆ. ಎಲ್ಲರೂ ಮಕ್ಕಳ ರಕ್ಷಣೆ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ಕೃಷಿ ವಿಶ್ವವಿದ್ಯಾಲಯದ ಗೃಹ ವಿಜ್ಞಾನಗಳ ವಿಭಾಗದ ಮುಖ್ಯಸ್ಥೆ ಡಾ.ಅನುಪಮಾ ಮಾತನಾಡಿ, ಮಕ್ಕಳು ದೇಶದ ಆಸ್ತಿ, ಭವಿಷ್ಯದ ಭಾರತವು ಅವರ ಕೈಯಲ್ಲಿದೆ. ದೇಶವನ್ನು ಸರಿಯಾಗಿ ಮುನ್ನಡೆಸಬೇಕಾದರೆ ಅವರಿಗೆ ಸಿಗಲೇಬೇಕಾದ ಕಾನೂನಾತ್ಮಕ ಹಕ್ಕುಗಳು ಮತ್ತು ರಕ್ಷಣೆಯೂ ಅವಶ್ಯವಾಗಿದೆ. ಅದರಂತೆ ಅವರ ಭವಿಷ್ಯವನ್ನು ರೂಪಿಸಲು ಸಹಾಯವಾಗಲಿದೆ ಎಂದರು.
ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಬಸವರಾಜ ಬ್ಯಾಗವಟ್, ಬಾಲನ್ಯಾಯ ಮಂಡಳಿಯ ಸದಸ್ಯ ರಾಮನಗೌಡ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಪ್ರಭುದೇವ ಪಾಟೀಲ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಮಂಗಳಾಹೆಗ್ಡೆ, ಸಂಪನ್ಮೂಲ ವ್ಯಕ್ತಿಯಾಗಿ ಸುದರ್ಶನ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿ ವೀರಭದ್ರಪ್ಪ ಮಾತನಾಡಿದರು.
ಸಿಬ್ಬಂದಿ ಹನುಮೇಶ, ರಮೇಶ, ಈರಮ್ಮ, ದಿನೇಶ, ನರಸಿಂಹಲು ಸೇರಿದಂತೆ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.