ಸಿಂಧನೂರು: ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ನೂತನ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರಿಗೆ ಸ್ವಾಗತ ಕೋರಿ ಹಾಕಲಾಗಿದ್ದ ಬೃಹತ್ ಕಮಾನು ಗಾಳಿಯಿಂದಾಗಿ ನೆಲಕ್ಕುರುಳಿ ನಾಲ್ಕೈದು ಜನರು ಗಾಯಗೊಂಡ ಪ್ರಕ ರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಬೀಬ್ ಖಾಜಿ, ಕನಕಪ್ಪ ಮ್ಯಾದರ್ ಹಾಗೂ ವಲಿ ಆರ್ಟ್ಸ್ನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಗರಸಭೆ ಪರವಾನಗಿ ಇಲ್ಲದೆ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅನಧಿಕೃತವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬಿಣದ ಫ್ಲೆಕ್ಸ್, ಬ್ಯಾನರ್, ಸ್ವಾಗತ ಕಮಾನುಗಳನ್ನು ಅಳವಡಿಸಿದ್ದರಿಂದ ಕಮಾನು ನೆಲಕ್ಕುರುಳಿ ಬಿದ್ದಿದೆ. ಇದರಿಂದಾಗಿ ನಾಲ್ಕೈದು ಜನರಿಗೆ ಗಂಭೀರ ಗಾಯಗಳಾಗಿವೆ. ಸಂಚಾರ ದೀಪದ ಕಂಬ ಮುರಿದು ಬಿದ್ದಿದೆ. ಘಟನೆಗೆ ಕಾರಣರಾದವರ ವಿರುದ್ಧ ಕರ್ನಾಟಕ ಓಪನ್ ಪ್ಲೇಸಸ್ ಹಾಗೂ ಬಿ.ಎನ್.ಎಸ್ ಕಾಯ್ದೆ ಅಡಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮೂವರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಬಿ.ಎಸ್.ತಳವಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.