ADVERTISEMENT

ರಾಯಚೂರು | ರೈಲ್ವೆ ಖಾಲಿ ಹುದ್ದೆಗಳ ಭರ್ತಿಗೆ ಸಹಿ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2024, 14:26 IST
Last Updated 7 ಆಗಸ್ಟ್ 2024, 14:26 IST
ರೇಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆ ಭರ್ತಿ ಮಾಡುವಂತೆ ಆಗ್ರಹಿಸಿ ಎಐಡಿವೈಒ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ರಾಯಚೂರಿನ ಜವಾಹರ್ ನಗರದ ಉದ್ಯಾನದಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹ ಮಾಡಿದರು
ರೇಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆ ಭರ್ತಿ ಮಾಡುವಂತೆ ಆಗ್ರಹಿಸಿ ಎಐಡಿವೈಒ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ರಾಯಚೂರಿನ ಜವಾಹರ್ ನಗರದ ಉದ್ಯಾನದಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹ ಮಾಡಿದರು   

ರಾಯಚೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕು. ರೈಲುಗಳಲ್ಲಿ ಕಾಯ್ದಿರಿಸದ(ಯು.ಆರ್) ಮತ್ತು ಸ್ಲೀಪರ್ ಕೋಚ್(ಆರ್)ಗಳನ್ನು ಹೆಚ್ಚಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಒ) ವತಿಯಿಂದ ಸಾರ್ವಜನಿಕರಿಂದ ಸಹಿ ಸಂಗ್ರಹ ಮಾಡಲಾಯಿತು.

ರಾಯಚೂರಿನ ಜವಾಹರ್ ನಗರ ಉದ್ಯಾನ ಮತ್ತು ಎಲ್.ವಿ.ಡಿ ಕಾಲೇಜು ಬಳಿಯ ವಾಯುವಿಹಾರ ಮಾಡುವ ಸಾರ್ವಜನಿಕರಿಂದ ಸಹಿ ಸಂಗ್ರಹಕ್ಕೆ ಚಾಲನೆ ನೀಡಲಾಯಿತು. ಕೆನರಾ ಬ್ಯಾಂಕಿನ ನಿವೃತ್ತ ಅಧಿಕಾರಿ ಶ್ಯಾಮಸುಂದ‌ರ್ ಅಭಿಯಾನಕ್ಕೆ ಚಾಲನೆ ನೀಡಿದರು.

ಶ್ಯಾಮಸುಂದರ್ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ರೈಲ್ವೆ ಇಲಾಖೆಯು ಎಲ್ಲ ರಿಯಾಯಿತಿ ಸೌಲಭ್ಯಗಳನ್ನು ರದ್ದುಪಡಿಸಿತ್ತು. ಇದರಿಂದ ಸಾರ್ವಜನಿಕರಿಗೆ ಅನೇಕ ಸಮಸ್ಯೆಯಾಗಿದೆ. ಹಿರಿಯ ನಾಗರಿಕರ ರಿಯಾಯಿತಿ ಸೌಲಭ್ಯವನ್ನು ಮರು ಜಾರಿ ಮಾಡಬೇಕು. ವಲಸೆ ಕಾರ್ಮಿಕರಿಗಾಗಿ ಸಂಪೂರ್ಣ ಕಾಯ್ದಿರಿಸದ ರೈಲುಗಳನ್ನು ಓಡಿಸಬೇಕು’ ಎಂದು ಆಗ್ರ‌ಹಿಸಿದರು.

ADVERTISEMENT

ಎಐಡಿವೈಒ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವ ಜಾನೇಕಲ್ ಮಾತನಾಡಿ, ‘ರೈಲ್ವೆ ಇಲಾಖೆಯಲ್ಲಿ 3.5 ಲಕ್ಷ ಸಿಬ್ಬಂದಿ ಕೊರತೆ ಇದೆ. ಗ್ರೂಪ್ ಸಿ ನಲ್ಲಿ 2,74,000 ಹುದ್ದೆಗಳು ಖಾಲಿ ಇವೆ. ಇವುಗಳನ್ನು ಭರ್ತಿ ಮಾಡಲು ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. 2019ರಿಂದ 2023ರವರೆಗೆ ಒಟ್ಟು 162 ರೈಲು ಅಪಘಾತಗಳು ಸಂಭವಿಸಿದ್ದು, ಸಾವಿರಾರು ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಪ್ರಯಾಣಿಕರ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ನಿವೃತ್ತ ಬ್ಯಾಂಕ್ ಮ್ಯಾನೇಜರ್ ಅಮರೇಶ ಆದೋನಿ, ಜಿಲ್ಲಾ ಘಟಕದ ಕಾರ್ಯದರ್ಶಿ ವಿನೋದ್ ಕುಮಾರ್, ಯಲ್ಲಪ್ಪ, ಸಂದೀಪ್, ಮೌನೇಶ, ಬಸವರಾಜ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.