ADVERTISEMENT

ನರೇಗಾ ಗುರಿ ಪೂರ್ಣಗೊಳಿಸಿ: ಸಂಸದ ರಾಜಾ ಅಮರೇಶ್ವರ ನಾಯಕ ಸೂಚನೆ

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 14:45 IST
Last Updated 5 ಜನವರಿ 2022, 14:45 IST
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು   

ರಾಯಚೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಡಿಯಲ್ಲಿ ಜಿಲ್ಲೆಗೆ ಹೆಚ್ಚಿನ ಮಟ್ಟದಲ್ಲಿ ಮಾನವ ದಿನಗಳನ್ನು ಸೃಜಿಸಿ, ಗುರಿಯನ್ನು ಪೂರ್ಣಗೊಳಿಸುವ ಮೂಲಕ ಶೇ 100ರಷ್ಟು ಸಾಧನೆ ಮಾಡಬೇಕು ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಬ್ಬರಿಗೂ ಉದ್ಯೋಗ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನರೇಗಾ ಯೋಜನೆ ಜಾರಿ ಮಾಡಿದೆ. ಗ್ರಾಮೀಣ ಭಾಗದ ಜನರಿಗೆ ಇದು ಅತ್ಯಂತ ಉತ್ತಮ ಯೋಜನೆಯಾಗಿದ್ದು, ಜಿಲ್ಲೆಯಾದ್ಯಂತ ಇದನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ADVERTISEMENT

ಹೋಬಳಿ ಕೇಂದ್ರಗಳಲ್ಲಿ ಕೃಷಿ ಯಂತ್ರಧಾರೆ ಯೋಜನೆಯಡಿ ಅಗತ್ಯವಿರುವ ರೈತರಿಗೆ ಸಕಾಲಕ್ಕೆ ಟ್ರ‍್ಯಾಕ್ಟರ್, ಟಿಲ್ಲರ್, ರೋಟಾವೇಟರ್ ನಂತಹ ಯಂತ್ರಗಳು ದೊರೆಯುವಂತೆ ವ್ಯವಸ್ಥೆ ಮಾಡಿಬೇಕು. ಅಲ್ಲದೆ ಇಲಾಖೆಯ ಸೌಲಭ್ಯಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಸಂಸದರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರವು ಜಲ ಜೀವನ್ ಮಿಷನ್ ಯೋಜನೆ ಆರಂಭಿಸಿದೆ. ಇದರಡಿ ಪ್ರತಿ ಗ್ರಾಮಕ್ಕೂ ಪೈಪ್‌ಲೈನ್ ಅಳವಡಿಸಿ ನಳ ಸಂಪರ್ಕದ ಮೂಲಕ ಕುಡಿಯುವ ನೀರು ಒದಗಿಸಬೇಕು ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ರಾಮಕೃಷ್ಣ ಅವರು ಮಾತಾನಾಡಿ, ಭಾರತ ಸರ್ಕಾರದಿಂದ ಲಸಿಕಾ ಅಭಿಯಾನ ಜಾರಿಗೊಳಿಸಿದ್ದು, ಅರ್ಹರೆಲ್ಲರೂ ಲಸಿಕೆ ಪಡೆಯಬೇಕು ಎಂಬ ಉದ್ದೇಶದಿಂದ ಶಾಲಾ-ಕಾಲೇಜುಗಳಲ್ಲಿ ಅಥವಾ ಹತ್ತಿರದ ಕೋವಿಡ್-19ರ ಲಸಿಕಾ ಕೇಂದ್ರದಲ್ಲಿ 15ರಿಂದ 18ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ ತಿಳಿಸಿದರು.

ಶಾಸಕರಾದ ಡಾ.ಶಿವರಾಜ ಪಾಟೀಲ್, ಬಸನಗೌಡ ದದ್ದಲ್, ದಿಶಾ ಸಮಿತಿಯ ನಾಮನಿರ್ದೇಶನ ಸದಸ್ಯರಾದ ನಾಗಪ್ಪ ನಾಯಕ, ಸಂಗೀತಾ ಜಗತಾಜ್, ಕೃಷ್ಣಾ ರಾಠೋಡ, ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್, ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ ಜಹಾರ ಖಾನಂ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.