ಲಿಂಗಸುಗೂರು: ‘ಜೀವನದ ಗ್ಯಾರಂಟಿಯೇ ಇಲ್ಲದವರಿಗೆ ಬದುಕಿನ ಗ್ಯಾರಂಟಿ ನೀಡಿದ್ದು ಕಾಂಗ್ರೆಸ್ ಸರ್ಕಾರ’ ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ನ ವಿವಿಧ ಘಟಕಗಳ ಪದಾಧಿಕಾರಿಗಳ ಹಾಗೂ ಸಂಸದರ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
‘ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಜ್ಯದ ಜನರ ಹಿತಕ್ಕಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ₹55 ಸಾವಿರ ಕೋಟಿ ಖರ್ಚು ಮಾಡುವ ಮೂಲಕ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ’ ಎಂದರು.
‘ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಇದರಿಂದ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿನ ಎರಡು ಲಕ್ಷಕ್ಕೂ ಅಧಿಕ ಹೆಕ್ಟೇರ್ ಭೂಮಿಗೆ ನೀರಾವರಿ ಸೌಲಭ್ಯ ಒದಗಲಿದೆ’ ಎಂದು ಹೇಳಿದರು.
‘ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಲಿ ಹಾಗೂ ಹೊಸ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಆಯೋಗದ ಮುಖಾಂತರ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸಿ ಸಮೀಕ್ಷೆ ಮೂಲಕ ಧರ್ಮ ಒಡೆಯಲಾಗುತ್ತಿದೆ ಎಂದು ಆರೋಪಿಸುತ್ತಿರುವ ವಿರೋದ ಪಕ್ಷದವರೇ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ’ ಎಂದರು.
‘ರಾಯಚೂರು-ಯಾದಗಿರಿ ಜಿಲ್ಲೆಗಳಲ್ಲಿ ರಸ್ತೆಗಳು ಅಭಿವೃದ್ಧಿಯಾಗುವ ಮೂಲಕ ಪ್ರಗತಿಯತ್ತ ಸಾಗುತ್ತಿವೆ. ಮೆಣಸಿನಕಾಯಿ ಬೆಳೆ ಬೆಲೆ ಕುಸಿದು ರೈತರು ಸಂಕಷ್ಟ ಅನುಭವಿಸುತ್ತಿರುವ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಕ್ಕೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಬೆಂಬಲ ಬೆಲೆಯಲ್ಲಿ ಮೆಣಸಿನಕಾಯಿ ಖರೀದಿಸಲು ಮುಂದಾಗಿದೆ’ ಎಂದು ಹೇಳಿದರು.
‘ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಬೆಳೆಗಳು ಹಾನಿಯಾಗಿದ್ದು, ಜಂಟಿ ಸಮೀಕ್ಷೆ ಕಾರ್ಯ ನಡೆದಿದ್ದು, ಸಮೀಕ್ಷೆಯ ವರದಿ ಬಂದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲಿದೆ. ಒಂದು ವೇಳೆ ಪರಿಹಾರಕ್ಕೆ ಕೇಂದ್ರಕ್ಕೆ ಪ್ರಸ್ತಾವ ಕಳಿಸಿದರೆ 9 ಜನ ಕಾಂಗ್ರೆಸ್ ಸಂಸದರು ಒಗ್ಗೂಡಿ ಹೋರಾಟ ಮಾಡಿಯಾದರೂ ಕೇಂದ್ರದಿಂದ ಅನುದಾನ ತರಲು ಪ್ರಯತ್ನ ಮಾಡಲಾಗುವುದು’ ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಡಿ.ಎಸ್.ಹೂಲಗೇರಿ, ಕೆಪಿಸಿಸಿ ಸದಸ್ಯ ಅಮರಗುಂಡಪ್ಪ ಮೇಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ಧನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋವಿಂದ ನಾಯಕ, ಶಿವಶಂಕರಗೌಡ ಮಾತನಾಡಿದರು.
ಶ್ರೀನಿವಾಸ ನಾಯಕ ಕೋಠ, ಮುದುಕಪ್ಪ ನೀರಲಕೇರಿ, ಚಂದ್ರಕಾಂತ ಜಾಗೀರದಾರ, ಮಹೇಂದ್ರ, ಪ್ರಶಾಂತ, ಎಸ್.ಆರ್.ರಸೂಲ್, ಬಸವರಾಜ ಜಲ್ಲಿ, ಸಂಜೀವಪ್ಪ ಚಲವಾದಿ, ಗಂಗಮ್ಮ ಕಟ್ಟಿಮನಿ, ವಿಜಯಲಕ್ಷ್ಮಿ ದೇಸಾಯಿ, ಬಾಬು ಹಟ್ಟಿ, ವೆಂಕಟೇಶ ಗುತ್ತೇದಾರ, ಶಿವಣ್ಣ ನಾಯಕ, ಅಮರೇಶ ಹೆಸರೂರು, ಖಾದರ್ ಪಾಷಾ, ದಾವೂದ್ ಸಾಬ್, ರಮೇಶ್ ಗುತ್ತೆದಾರ, ಬಸನಗೌಡ ಕಂಬ್ಳಿ, ತಿಮ್ಮಣ್ಣ ಗುತ್ತೇದಾರ, ಸಂತೋಷ ಸೊಪ್ಪಿಮಠ, ರಾಘವೇಂದ್ರ ಕುದುರಿ, ಗದ್ದೇನಗೌಡ ಜಾಗೀರನಂದಿಹಾಳ, ವೀರೇಶ ಭೋವಿ ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.